ಬಸವನಾಡಿಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳ ನಿರ್ಮಾಣ- ಡಿಸಿಎಂ ಗೋವಿಂದ ಕಾರಜೋಳ

ವಿಜಯಪುರ, ಮಾ 22- ವಿಜಯಪುರ ನಗರದ ಬಾಬು ಜಗಜೀವನರಾಮ್ ವೃತ್ತದಿಂದ ಮಹಿಳಾ ವಿಶ್ವವಿದ್ಯಾಲಯದವರೆಗೆ ರಸ್ತೆ ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಲ್ಲಿ ನಿರ್ಮಿಸಲಾಗುವುದೆಂದು ರಾಜ್ಯ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರು ಹೇಳಿದರು.

ವಿಜಯಪುರ ನಗರದ ಬಾಬು ಜಗಜೀವನರಾಮ್ ವೃತ್ತದಿಂದ ಸುಭಾಸ್ ಚಂದ್ರ ಬೋಸ್ ವೃತ್ತದವೆರಗೆ 17.50 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಇಟಗಿ ಪೆಟ್ರೋಲ್ ಪಂಪ್‍ದಿಂದ ಮಹಿಳಾ ವಿಶ್ವವಿದ್ಯಾಲಯದವರೆಗೆ 35 ಕೋಟಿ ರೂ. ವೆಚ್ಚದ ಡಾಂಬರೀಕರಣ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಈ ರಸ್ತೆಯನ್ನು ಅತ್ಯುತ್ತಮ ಗುಣಮಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ ಮಾದರಿಯಲ್ಲಿ ಹಾಗೂ ಸುಮಾರು 50 ವರ್ಷಗಳ ಕಾಲ ಬಾಳುವಂತಹ ರೀತಿಯಲ್ಲಿ ಐತಿಹಾಸಿಕ ನಗರದ ಅಂದ ಹೆಚ್ಚಿಸುವ ರೀತಿಯಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.

ಐತಿಹಾಸಿಕ ನಗರವಾದ ವಿಜಯಪುರಕ್ಕೆ ಈ ರಸ್ತೆ ಅತ್ಯಂತ ಸುಂದರವಾಗಿ ಸುಮಾರು 18 ಮೀಟರ್ ಅಗಲವಾದ 4 ಲೇನ್ ರಸ್ತೆ ಇದಾಗಿದ್ದು, ಮುಂದಿನ ಆರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆ ಈ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಹಾಗೂ ಅಭಿವೃದ್ಧಿ ವಿಷಯದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ಸಲಹೆ ನೀಡಿದರು.

ಪ್ರಸಕ್ತ ಸರಕಾರ ಬಂದ ತಕ್ಷಣ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 173 ವಸತಿ ಶಾಲೆಗಳ ಕಾಮಗಾರಿ ಆರಂಭಿಸಿ ಈವರೆಗೆ 70 ವಸತಿ ಶಾಲೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅದರಂತೆ ನೂರಾರು ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದ್ದು, ಮಕ್ಕಳು ಸುಂದರವಾದ ವಾತಾವರಣದಲ್ಲಿ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂತಹ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ. ಕಟ್ಟಡಗಳ ವೆಚ್ಚಕ್ಕಾಗಿಯೇ ಸುಮಾರು 2400 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನಾಂಗದ ಅನುಕೂಲಕ್ಕಾಗಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿಜಯಪುರದ ಸರಕಾರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ ಅವರು ಅದರಂತೆ ರಾಜ್ಯದ ಎಲ್ಲ ಜಿಲ್ಲಾ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಇಂತಹ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.

ವಿಜಯಪುರ ನಗರದಲ್ಲಿ ನಾವು ಹುಟ್ಟಿ ಬೆಳೆದಿದ್ದು, ಈ ಊರಿನ ಋಣ ತೀರಿಸಲು ನಾವು ಸದಾ ಬದ್ದವಿರುವುದಾಗಿ ತಿಳಿಸಿದ ಅವರು ಐತಿಹಾಸಿಕವಾದ ಈ ನಗರವನ್ನು ಸುಂದರ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ವಿಮಾನನಿಲ್ದಾಣ ನಿರ್ಮಾಣವಾಗಲಿದ್ದು, ಇದರಿಂದಲೂ ಹೆಚ್ಚಿನ ಸಹಕಾರಿಯಾಗಲಿದೆ.
ಅದರಂತೆ ವಿವಿಧ ರಸ್ತೆಗಳ ಸುಧಾರಣೆ ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಗಮನ ನೀಡಲಾಗುವುದು. ಮುಂದಿನ ಹಣಕಾಸು ವರ್ಷದಲ್ಲಿ ವಿಜಯಪುರಕ್ಕೆ ನಗರಕ್ಕೆ ಹೆಚ್ಚಿನ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 35 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು ಇದಕ್ಕಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸಿದರು. ಅದರಂತೆ ಮಹಾನಗರಪಾಲಿಕೆ ವ್ಯಾಪ್ತಿಯ 175 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ, 265 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರಗ್ರೌಂಡ್ ಕೇಬಲ್ ಅಳವಡಿಕೆ, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್, ವಾಕಿಂಗ್ ಟ್ರ್ಯಾಕ್, 35 ಬಡಾವಣೆಗಳಲ್ಲಿ ಓಪನ್ ಜಿಮ್ ಮಾಡಲಾಗಿದೆ ಎಂದು ಹೇಳಿದರು.

ನಗರದಲ್ಲಿ ದಾಖಲೆ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಅಂದಾಜು ಒಂದು ಸಾವಿರ ಕೋಟಿ ರೂಪಾಯಿ ಕಾಮಗಾರಿಗಳು ನಡೆಯುತ್ತಿವೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ವಿಜಯಪುರವನ್ನು ಮಾದರಿ ನಗರವನ್ನಾಗಿ ಮಾಡಲಾಗುವುದು. ನಗರದ ಗಾಂಧೀವೃತ್ತದಲ್ಲಿ ಫ್ಲೇಓವರ್ ಹಾಗೂ ವಾಣಿಜ್ಯ ಮಳಿಗೆಗಾಗಿ 28 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ ಅವರು ನಗರಕ್ಕೆ ರಸ್ತೆಗಳಿಗಾಗಿ ಮುಂದಿನ ದಿನಗಳಲ್ಲಿ 30 ಕೋಟಿ ರೂಪಾಯಿ ಒದಗಿಸುವಂತೆ ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ್ ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌