ಭ್ರೂಣಲಿಂಗ ಪತ್ತೆ, ಹತ್ಯೆಯಲ್ಲಿ ತೊಡಗುವ ವೈದ್ಯರ ವಿರುದ್ಧ ಕಾನೂನು ಕ್ರಮ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ

ಬಸವ ನಾಡು
ವಿಜಯಪುರ, ಮಾ. 30- ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯಲ್ಲಿ ತೊಡಗುವ ವೈದ್ಯರು ಹಾಗೂ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪಿ. ಸಿ ಮತ್ತು ಪಿ. ಎನ್. ಡಿ. ಟಿ ಕೋಶ ವಿಜಯಪುರ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ, ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹೆಣ್ಣು ಮಗು ಉಳಿಸಿ ಹೆಣ್ಣು ಮಗು ಓದಿಸಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿ ಹೆಣ್ಣು ಮತ್ತು ಗಂಡು ಅನುಪಾತದಲ್ಲಿ ಏರುಪೇರು ಆಗಿರುವುದಕ್ಕೆ ಮೂಲ ಕಾರಣ ಹೆಣ್ಣು ಭ್ರೂಣ ಹತ್ಯೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯಲ್ಲಿ ತೊಡಗಿರುವವರ ಬಗ್ಗೆ ನಿರಂತರ ದೂರುಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇನ್ನು ಮುಂದೆ ಇಂತಹ ಅಮಾನುಷ ಹಾಗೂ ಅನೈತಿಕ ಚಟುವಟಿಕೆ ನಡೆಯಬಾರದೆಂದು ವೈದ್ಯ ಸಮೂಹ ಹಾಗೂ ಆಸ್ಪತ್ರೆಗಳಿಗೆ ಎಂದು ಅವರು ಎಚ್ಚರಿಕೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಇಂಥ ಅನಧಿಕೃತ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯಲ್ಲಿ ತೊಡಗಿರುವ ಆಸ್ಪತ್ರೆಗಳ ಬಗ್ಗೆ ತೀವ್ರ ನಿಗಾ ಇಡಲಾಗುವುದು. ಕೆಲವು ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ , ಜಿಲ್ಲಾ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ಪರಿಶೀಲನಾ ಸಮಿತಿ ಸಭೆಗಳಲ್ಲಿ ಪರಿಶೀಲಿಸಲಾಗಿ ಕೆಲವು ಆಸ್ಪತ್ರೆಗಳಲ್ಲಿ ಸಿ.ಸಿ ಕ್ಯಾಮರಾ ಹಾಗೂ ಅಸಮರ್ಪಕ ದಾಖಲಾತಿ ಇರುವುದರ ಬಗ್ಗೆ ಲೋಪ ಕಂಡು ಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಮಾಜದ ಹಿತದೃಷ್ಟಿಯಿಂದ, ಹೆಣ್ಣು ಮಗುವಿನ ರಕ್ಷಣೆಗಾಗಿ ಇನ್ನು ಮುಂದೆ ಗಂಭೀರ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.


ಜಿಲ್ಲೆಯಲ್ಲಿ ಅವ್ಯಾಹತವಾಗಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಅಂಕಿ-ಅಂಶಗಳಿಂದ ತಿಳಿದು ಬರುತ್ತಿದ್ದು, ಉಪವಿಭಾಗಿಯ ಹಂತದಲ್ಲಿ ಇನ್ನು ಮುಂದೆ ಉಪವಿಭಾಗಾಧಿಕಾರಿಗಳು ಹಾಗೂ ಡಿ.ವೈ.ಎಸ್.ಪಿ ಗಳ ನೇತೃತ್ವದಲ್ಲಿ ಉಪವಿಭಾಗಿಯ ಸಮಿತಿಗಳನ್ನು ರಚಿಸಿ ಅನಿರೀಕ್ಷಿತವಾಗಿ ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ದಾಳಿ ನಡೆಸಿ ಪರಿಶಿಲಿಸಲಾಗುವುದು. ಅಲ್ಲದೇ, ತಾವು ಸಹ ಅನಿರೀಕ್ಷಿತವಾಗಿ ಭೇಟಿ ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ಇಂಥ ಅಮಾನುಷ, ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
1994 ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪ್ರಕಾರ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಅನುಸಾರ ಭ್ರೂಣ ಲಿಂಗಪತ್ತೆ ಭ್ರೂಣಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ ಇದನ್ನು ಉಲ್ಲಂಘಿಸಿದಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ರೂ. 10 ಸಾವಿರ ದಂಡ ವಿಧಿಸಲಾಗುವುದು ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದ್ದಲ್ಲಿ ಅವರಿಗೆ ಮೊದಲನೇ ಅಪರಾಧಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ರೂ. 10 ಸಾವಿರ ದಂಡ ವಿಧಿಸಲಾಗುವುದು. ಇದೇ ಅಪರಾಧ ಮತ್ತೊಮ್ಮೆ ಮಾಡಿದ್ದಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ರೂ. 50 ಸಾವಿರ ದಂಡ ವಿಧಿಸಲಾಗುವುದು. ನ್ಯಾಯಾಲಯದಲ್ಲಿ ಅಪರಾಧ ನಿರ್ಣಯವಾಗುವ ವರೆಗೂ ಅವರ ನೊಂದಣಿಯನ್ನು ತಡೆ ಹಿಡಿಯಲಾಗುವುದು. ಅಪರಾಧ ದೃಢಪಟ್ಟರೆ ಪ್ರಥಮ ಅಪರಾಧವಾದಲ್ಲಿ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೇದಿಕೆಯ ವೃತ್ತಿ ಮಾಡದಂತೆ ಅವರ ಹೆಸರನ್ನು 5 ವರ್ಷದವರೆಗೆ ತೆಗೆದು ಹಾಕಲಾಗುವುದು. ನಂತರದ ಅಪರಾಧಕ್ಕೆ ಶಾಶ್ವತವಾಗಿ ರಾಜ್ಯ ವೈದ್ಯಕೀಯ ಮಂಡಳಿಯಿಂದ ಅವರ ಹೆಸರನ್ನು ತೆಗೆದು ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.


ಮಹಿಳೆ ಆಕೆಯ ಪ್ರತಿ ಹಾಗೂ ಅವರ ಸಂಬಂಧಿಕರು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅಂಥವರು ವಿರುದ್ಧ ಈ ಕಾಯಿದೆಯಡಿ ಶಿಕ್ಷೆಗೆ ಕ್ರಮ ಕೈಗೊಳ್ಳಲಾಗುವುದು. ಮೊದಲ ಅಪರಾಧಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ 50 ಸಾವಿರ ರೂಗಳ ದಂಡ ವಿಧಿಸಲಾಗುವುದು. ನಂತರದ ಅಪರಾಧಕ್ಕೆ 5 ವರ್ಷದವರೆಗೆ ಜೈಲು ಶಿಕ್ಷೆ ಜೊತೆಗೆ ರೂ. 1 ಲಕ್ಷ ವರೆಗೆ ದಂಡ ವಿಧಿಸಲಾಗುವುದು. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಎಲ್ಲಾ ಸೆಂಟರ್ ಗಳು ಜೆನಿಟಿಕ್ ಕ್ಲಿನಿಕ್‍ಗಳು ಹಾಗೂ ಜೆನಿಟಿಕ್ ಪ್ರಯೋಗಾಲಯಗಳು ಸಂಬಂಧಪಟ್ಟ ಜಿಲ್ಲಾ ಸಕ್ಷಮ ಪ್ರಾಧಿಕಾರ ದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ ನೀಡಿದರು.
ಈ ಕಾರ್ಯಾಗಾರದಲ್ಲಿ ಡಾ.ಗೊರಖ್ ಮಂದ್ರೂಪಕರ, ಎನ್ ಐ ಎಂ ಸಿ ಮತ್ತು ಪಿ ಎನ್ ಡಿ ಟಿ ಮೆಡಿಕಾಲಯಿಸ್ಡ್ ಅಡ್ವಾಯ್ಸರ್ ಮಾತನಾಡಿ, ಜಿಲ್ಲಾಮಟ್ಟದ ಗರ್ಭಧಾರಣಾ ಮತ್ತು ಪ್ರಸವಪೂರ್ವ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆಯ ನೀμÉಧ) ಕಾಯ್ದೆಯ (ಪಿ. ಸಿ ಮತ್ತು ಪಿ.ಎನ್.ಡಿ.ಟಿ) ಅಡಿಯಲ್ಲಿ ನೊಂದಾಯಿತ ಸಂಸ್ಥೆಯ ತಜ್ಞ ವೈದ್ಯರುಗಳಿಗೆ ಪಿ. ಸಿ ಮತ್ತು ಪಿ. ಎನ್. ಡಿ. ಟಿ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಡಾ. ವಿಠ್ಠಲ ಶಿಂಧೆ. ಟಿ. ಎಚ್. ಒ ಚಿಕ್ಕೋಡಿ ಮಾತನಾಡಿ ಅನಧಿಕೃತವಾಗಿ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಯರಗಲ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಶ್ ನಾಗರಬೆಟ್ಟ ತಾಲೂಕು ಆರೋಗ್ಯ ಅಧಿಕಾರಿಗಳಾದ ಕವಿತಾ ದೊಡ್ಡಮನಿ, ಡಾ. ಪಿಟರ್ ಅಲೇಕ್ಸಾಂಡರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಕುಟುಂಬ ಕಲ್ಶಾಣ ಅಧಿಕಾರಿ ರಾಜೇಶ್ವರಿ ಗೋಲಗೇರಿ, ವೈದ್ಯರು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಡಾ. ಹೊಸಮನಿ, ದೀಪಾ ಪ್ರಾರ್ಥಿಸಿದರು.

Leave a Reply

ಹೊಸ ಪೋಸ್ಟ್‌