ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರರಿಗೂ ಕೊರೊನಾ ವ್ಯಾಕ್ಸಿನ್ ಸೌಲಭ್ಯ- ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದರೂ ರಾಜ್ಯಾದ್ಯಂತ ಹಲವಾರು ಜನ ಹಿರಿಯ ನಾಗರಿಕರು ಆಧಾರ ಕಾರ್ಡ್ ಇಲ್ಲದ ಕಾರಣ ಈವರೆಗೆ ಲಸಿಕೆಯಿಂದ ವಂಚಿತರಾಗಿದ್ದರು. ಈ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಹಿರಿಯ ನಾಗರಿಕರ ಸಚಿವೆ ಶಶಿಕಲಾ ಜೊಲ್ಲೆ ಸಹಾಯಕ್ಕೆ ಧಾವಿಸಿದ್ದಾರೆ.

ಈಗ ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ. ಸಚಿವೆಯ ಮನವಿಗೆ ಆರೋಗ್ಯ ಸಚಿವ ಡಾ. ಸುಧಾಕರ ಕೂಡ ಸ್ಪಂದಿಸಿದ್ದು, ಶ್ರೀಘ್ರವೇ ಲಸಿಕೆ ನೀಡಲಾಗುವುದು ಭರವಸೆಯನ್ನೂ ನೀಡಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು. ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಮತ್ತು ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಅಲ್ಲದೆ, ಎಲ್ಲಾ ಜಿಲ್ಲಾ ಮತ್ತು ತಾಲೂಕಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಆರೋಗ್ಯ ಸಚಿವ ಡಾ. ಸುಧಾಕರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಇವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌