ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ- ಹೊರ ರಾಜ್ಯಗಳಿಂದ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಶಿಗ್ಗಾವಿ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಜನರು ಇನ್ನು ಮುಂದೆ ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಈ ನಿಯಮವನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲಾಕಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಲವಾರು ನಿರ್ಬಂಧ ವಿಧಿಸಲಾಗಿದೆ. ಎಲ್ಲ ಕಡೆ ಪೊಲೀಸ್ ನಾಕಾ ಬಂದಿ ಹಾಕಲಾಗಿದೆ. ವಿಶೇಷವಾಗಿ ಗಡಿ ಪ್ರದೇಶದಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಹೊರ ರಾಜ್ಯದಿಂದ ಗಡಿ ಜಿಲ್ಲೆಗಳ ಮೂಲಕ ಕರ್ನಾಟಕಕ್ಕೆ ಪ್ರವೇಶ ಬಯಸುವವರು ಕೊರೊನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಇಲ್ಲದಿದ್ದರೆ ಯಾರನ್ನೂ ಕರ್ನಾಟಕದ ಒಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ, ವಿಜಯಪುರ, ಕಲಬುರ್ಗಿ, ಮಂಗಳೂರು, ಉಡುಪಿ, ಆನೆಕಲ್ ನಲ್ಲಿ ಕಠಿಣ ನಿರ್ಬಂಧ ಹೇರುವಂತೆ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಗಡಿ ಪ್ರದೇಶಗಳಲ್ಲಿ ಕೆಲವರು ಒಳ ದಾರಿಗಳ ಮೂಲಕ ರಾಜ್ಯ ಪ್ರವೇಶ ಮಾಡಲು ಪ್ರಯತ್ನ ಮಾಡುತ್ತಾರೆ. ಅಂಥ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಿ, ನಾಕಾಬಂದಿ ಮಾಡಿ, ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಇದ್ದವರನ್ನು ಮಾತ್ರ ರಾಜ್ಯದೊಳಗೆ ಬಿಡುವಂತೆ ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌