ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಲ್ಲಾ ಊಹಾಪೋಹ- ಮೇಕೆದಾಟು ವಿವಾದ ನಾಳೆ ತಜ್ಞರೊಂದಿಗೆ ಸಭೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬುದೆಲ್ಲ ಊಹಾಪೋಹಗಳು. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವ ಸುದ್ದಿಯೂ ಅಧಿಕೃತ ಅಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು‌.

ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವ ಸುದ್ದಿ ಯೂ ಅಧಿಕೃತ ಅಲ್ಲ, ಎಲ್ಲ ಊಹಾಪೋಹಗಳು. ಊಹಾಪೋಹಗಳಿಗೆ ಉತ್ತರ ಕೊಡಲಾಗುವುದಿಲ್ಲ. ಉತ್ತರ ಕೊಡಲು ಬರುವುದಿಲ್ಲ. ನಾನು ಉತ್ತರ ಕೊಡುವುದಿಲ್ಲ ಎಂದು ತಿಳಿಸಿದರು.

ಸಿಎಂ ಸ್ಥಾನಕ್ಕೆ ಕೆಲವು ನಾಯಕರ ಹೆಸರುಗಳು ಕೇಳಿ ಬರುತ್ತಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಸ್ಥಾನಕ್ಕೆ ಯಾರ ಹೆಸರಿದೆಯೋ ಅವರನ್ನು ಕೇಳಿ ಎಂದು ಹೇಳಿದರು.

ಮೇಕೆದಾಟು ಯೋಜನೆ ವಿವಾದ

ಈ ಮಧ್ಯೆ, ಮೇಕೆದಾಟು ಯೋಜನೆಯಲ್ಲಿ ಪರಿಸರಕ್ಕೆ ತೊಂದರೆ ಆಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲು ಚೆನ್ನೈ ನಲ್ಲಿರುವ ರಾಷ್ಟ್ರೀಯ ಹಸಿರು ಪೀಠ ದಿನಪತ್ರಿಕೆಯ ವರದಿಯನ್ನು ಆಧರಿಸಿ ಸ್ವಯಂ ಪ್ರೇರಣೆಯಿಂದ ಸಮಿತಿ ರಚನೆ ಮಾಡಿದೆ. ಈ ಸಮಿತಿಯ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧತೆ ನಡೆಸುವ ಸಂಬಂಧ ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ, ಈ ಸಂಬಂಧ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು. ಅಲ್ಲಿ ಪರಿಸರ ನಾಶ ಆಗಿದೆಯೇ? ಪರಿಸರಕ್ಕೆ ತೊಂದರೆಯಾಗಿದೆಯೆ? ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲು ಸಮಿತಿ ರಚಿಸಿದೆ. ಈ ಸಂಬಂಧ ಯಾರೂ ಅಧಿಕೃತವಾಗಿ ದೂರು ನೀಡದಿದ್ದರೂ ಹಸಿರು ಪೀಠ ಸ್ವಯಂ ಪ್ರೇರಿತವಾಗಿ ಸಮಿತಿ ರಚನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಿದೆ ಎಂದು ಗೃಹ ಸಚಿವರು ತಿಳಿಸಿದರು.

ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಂತಾರಾಜ್ಯ ಜಲ ವಿವಾದದ ಕಾನೂನು ಪಂಡಿತರು, ಹಿರಿಯ ವಕೀಲರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಈಗಾಗಲೇ ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂ ಕೋರ್ಟಿಗೆ ಎಲ್ಲ ವಿವರಗಳನ್ನು ನೀಡಲಾಗಿದೆ. ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಕೆ ಮಾಡಿಕೊಳ್ಳುತ್ತಿದೆ. ಇಂಥ ಸಂದರ್ಭದಲ್ಲಿ ಸಮಿತಿ ರಚನೆ ಮಾಡಿದ್ದು ಎಷ್ಟು ಸಮಯೋಚಿತ? ಹಾಗೂ ಎಷ್ಟು ಕಾನೂನುಬದ್ಧ? ಎಂಬ ಪ್ರಶ್ನೆ ಉದ್ಭವಿಸಿದೆ‌. ಹೀಗಾಗಿ ಈ ವಿಚಾರದಲ್ಲಿ ಕಾನೂನಾತ್ಮಕವಾಗಿ ಕರ್ನಾಟಕದ ಹಿತ ಕಾಪಾಡುವುದು ನಮ್ಮ ಕೆಲಸ. ಅದನ್ನು ಯಾವ ರೀತಿ ಪರಿಣಾಮಕಾರಿಯಾಗಿ ಮಾಡಬೇಕು ಎಂಬುದರ ಕುರಿತು ಗುರುವಾರ ಪ್ರಮುಖವಾದ ಸಭೆ ನಡೆಯಲಿದೆ ಎಂದು ಕಾನೂನು ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದರು

Leave a Reply

ಹೊಸ ಪೋಸ್ಟ್‌