ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಟ್ ಆದವರಿಗೆ ಆಹಾರ, ಔಷಧಿ ಕಿಟ್ ನೀಡಿ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರ ಕುಟುಂಬಗಳಿಗೆ ಆಹಾರ ಮತ್ತು ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿನ‌ ಆಯ್ದ ಕೆಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರ ಮನೆಗಳನ್ನು ಕಂಟೇನ್ಮೆಂಟ್ ಜೋನ್ ಗಳೆಂದು ಪರಿಗಣಿಸಲು ಸೂಚಿಸಲಾಗಿದೆ.‌ ಈ ಹಿನ್ನೆಲೆಯಲ್ಲಿ ಆ ಕುಟುಂಬಗಳಿಗೆ ಅಗತ್ಯ ಔಷಧಿ ಮತ್ತು ಪಡಿತರ ವ್ಯವಸ್ಥೆ ಮಾಡಬೇಕು. ಆಹಾರ ಎಂದರೆ ಕೇವಲ ಅಕ್ಕಿ ಅಷ್ಟೇ ಅಲ್ಲ, ಬೇಳೆ, ಬೆಲ್ಲ, ಎಣ್ಣೆ, ಉಪ್ಪು ನೀಡಿ. ಒಟ್ಟಿನಲ್ಲಿ ಹೋಮ್ ಐಸೋಲೇಷನ್ ನಲ್ಲಿರುವ ಕುಟುಂಬಗಳು ಮನೆಯಿಂದ ಹೊರ ಬಾರದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಂಕಿತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಿಕೊಳ್ಳಬೇಕು. ಉಸಿರಾಟದಲ್ಲಿ ಸ್ವಲ್ಪ ಏರುಪೇರು ಕಂಡು ಬಂದರೂ ತಕ್ಷಣ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕು. ಮನೆಯಲ್ಲಿ ಐಸೋಲೇಷನ್ ಆಗಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಇಲ್ಲದಿದ್ದರೆ ತಡ ಮಾಡದೇ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗುವಂತೆ ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸಿ ಎಂದು ಬೊಮ್ಮಾಯಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌