ವಿಜಯಪುರ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸುವ ರೂ. 2385.51 ಜಲಧಾರೆ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ವಿಜಯಪುರ: :ವಿಜಯಪುರ ಜಿಲ್ಲೆಯ 12 ನಗರ ಪ್ರದೇಶಗಳು ಮತ್ತು ಗ್ರಾಮೀಣ ಭಾಗದ 1035 ಜನವಸತಿಗಳಿಗೆ ನೀರನ್ನು ಒದಗಿಸಲು ಅಂದಾಜು ರೂ. 2385.51 ಕೋ. ವೆಚ್ಚದ ಮಹತ್ವಾಕಾಂಕ್ಷಿ ಜಲಧಾರೆ ಯೋಜನೆ ಯನ್ನು ಜಲ್ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

ಕುಡಿಯುವ ನೀರಿನ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ
ವಿಜಯಪುರ ಜಿಲ್ಲೆಯ ಗ್ರಾಮಗಳು ಹಾಗೂ ಪಟ್ಟಣಗಳಿಗೆ ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ಬರ ಪೀಡಿತ ಜಿಲ್ಲೆಯ ಗ್ರಾಮಗಳು ಮತ್ತು ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಗ್ರಾಮೀಣ ಜನ ವಸತಿಗಳಿಗೆ 55 ಎಲ್ ಪಿ ಸಿ ಡಿ ಯಂತೆ ಹಾಗೂ ನಗರ ಸ್ಥಳೀಯ ಪಟ್ಟಣಗಳಿಗೆ 135 ಎಲ್ ಪಿ ಸಿ ಡಿ ಗುಣಮಟ್ಟದ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಮೂರು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, 30 ತಿಂಗಳಲ್ಲಿ ಯೋಜನೆಯನ್ನು ಕಾರ್ಯಗತ ಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಿಂದ ಸ್ಕೀಮ್- 1ರಲ್ಲಿ ಅಂದಾಜು ರೂ. 1431.48 ಕೋ. ಜಾರಿಗೊಳ್ಳಲಿದೆ. ಇದರಿಂದ ಬಸವನ ಬಾಗೇವಾಡಿ, ವಿಜಯಪುರ (ವಿಜಯಪುರ ನಗರ ಹೊರತುಪಡಿಸಿ ) ಮತ್ತು ಇಂಡಿ ತಾಲೂಕಿನ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರು ಸರಬರಾಜು ಆಗಲಿದೆ. ನಾರಾಯಣಪೂರ ಅಣೆಕಟ್ಟಿನ ಹಿನ್ನೀರಿನಿಂದ ಸ್ಕೀಮ್- 2 ರಲ್ಲಿ ಅಂದಾಜು ರೂ. 954.51 ಕೋ. ಜಾರಿಯಾಗಲಿದೆ. ಇದರಿಂದ ಮುದ್ದೇಬಿಹಾಳ ಮತ್ತು ಸಿಂದಗಿ ತಾಲೂಕಿನ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ನೀರು ಸರಬರಾಜು ಆಗಲಿದೆ.

ಈ ಮಹತ್ವಾಕಾಂಕ್ಷಿ ಜಲಧಾರೆ ಕುಡಿಯುವ ನೀರಿನ ಯೋಜನೆಯನ್ನು ಜಲಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌