ಲಾಕಡೌನ್ ವಿಸ್ತರಣೆ ಕುರಿತು ಸಚಿವರ ಸಭೆಯಲ್ಲಿ ಸಿಎಂ ನಿರ್ಧರಿಸುತ್ತಾರೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಧ್ಯಕ್ಕೆ ಜೂ.7ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕಡೌನ್ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಸದ್ಯಕ್ಕೆ ಜೂ.7ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂ.30ರ ವರೆಗೆ ಬಿಗಿ ಕ್ರಮಗಳು ಇರಬೇಕು ಎಂದು ಹೇಳಿದೆ. ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇ. 10ಕ್ಕಿಂತ ಕಡಿಮೆ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೊರೊನಾ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೊರೊನಾ ಹತೋಟಿಗೆ ಬರಲು ಸಾಧ್ಯ. ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಲಾಕಡೌನ್ ನಷ್ಟಕ್ಕೆ ಪರಿಹಾರ ನೀಡಿ

ಇದೇ ವೇಳೆ, ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿರುವ ರೂ. 11 ಸಾವಿರ ಕೋ. ಜಿ ಎಸ್ ಟಿ ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಾಗಿದೆ. ಈ ವರ್ಷ ಮತ್ತೆ ಕೊರೊನಾ ಬಂದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಚೇತರಿಸಿಕೊಂಡಿತ್ತು. ಆದರೆ ಈಗ ಮತ್ತೆ ಲಾಕಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ 2-3 ತಿಂಗಳು ಜಿ ಎಸ್ ಟಿ ಎಸ್ಟಿ ಸಂಗ್ರಹ ಕಡಿಮೆಯಾಗುತ್ತದೆ. ಹೀಗೆ ಲಾಕಡೌನ್ ನಲ್ಲಿ ಕಡಿಮೆಯಾಗುವ ಜಿ ಎಸ್ ಟಿ ಪರಿಹಾರವನ್ನು ತುಂಬಿ ಕೊಡುವಂತೆ ಎಲ್ಲ ರಾಜ್ಯಗಳು ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯ ಮಾಡಿದೆವು‌ ಎಂದು ಅವರು ತಿಳಿಸಿದರು.

ಕರ್ನಾಟಕದಿಂದ ನಾನು ಕೂಡ ಇದೇ ಒತ್ತಾಯ ಮಾಡಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಜಿ ಎಸ್
ಟಿ ಯಿಂದ ಎಷ್ಟು ಪರಿಹಾರ ಕೊಡಬೇಕು? ಸಾಲ ಪಡೆಯಲು ಅನುಮತಿ ನೀಡಬೇಕಾ? ಇದನ್ನು ಹೊರತು ಪಡಿಸಿ ಉಳಿದ ಪರಿಹಾರ ಹಣವನ್ನು ಯಾವ ರೂಪದಲ್ಲಿ ನೀಡಲು ಸಾಧ್ಯ? ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ

ಇದೇ ವೇಳೆ, ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಸತ್ಯ ಹೊರ ಬರಲಿದೆ. ಪ್ರಕರಣದ ಹಿನ್ನೆಲೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಗೃಹ ಸಚಿವ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌