ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ನಗರದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಕಾಮಗಾರಿಗಳು 15 ತಿಂಗಳಲ್ಲಿ ಪೂರ್ಣವಾಗಲಿವೆ. ಬಳಿಕ ಇದನ್ನು ಕೋವಿಡ್ ಆಸ್ಪತ್ರೆಯಾಗಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ‌.

ವಿಜಯಪುರ ನಗರದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಆಸ್ಪತ್ರೆಯ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ. ಮೊದಲ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಆರ್ ಎನ್ ಆರ್ ಗುತ್ತಿಗೆದಾರರಿಗೆ ಎರಡನೇ ಹಂತದ ಕಾಮಗಾರಿ ಕೈಗೊಳ್ಳಲು ಉಸ್ತುವಾರಿ ವಹಿಸಲಾಗಿದೆ. ಮುಂದಿನ 15 ತಿಂಗಳಲ್ಲಿ ಈ ಆಸ್ಪತ್ರೆಯ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಂತ್ರಿಕ ಕಾರಣಗಳಿಂದಾಗಿ ಈ ಆಸ್ಪತ್ರೆಯ ಕಾಮಗಾರಿಗಳು ನೆನೆಗುದಿಗೆ ಬಿದ್ದಿದ್ದವು. ಕೊರೊನಾ ಮೂರನೇ ಅಲೆಯ ಕುರಿತು ತಜ್ಞರ ಅಭಿಪ್ರಾಯ ದೃಷ್ಟಿಕೋನದಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರನ್ನು ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಸಹ ಬೇಟಿ ಮಾಡಿತ್ತು. ಅದರಂತೆ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ ಅವರ ಸಲಹೆ ಮತ್ತು ಜನಪ್ರತಿನಿಧಿಗಳ ಸಲಹೆ ಹಿನ್ನೆಲೆ ಈ ಆಸ್ಪತ್ರೆಯ ಕಾಮಗಾರಿಗಳು ಈಗ ಆರಂಭಗೊಂಡಿವೆ ಎಂದು ಹೇಳಿದರು.

ಆಸ್ಪತ್ರೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಈಗ ವಿದ್ಯುತ್, ನೀರು ಸರಬರಾಜು, ಚರಂಡಿ ಸೇರಿದಂತೆ ಎರಡನೇ ಹಂತದ ಕಾಮಗಾರಿಗಳು ನಾಲ್ಕು ದಿನಗಳಿಂದ ತ್ವರಿತವಾಗಿ ನಡೆಯುತ್ತಿವೆ. ಇದಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಮೊದಲ ಮತ್ತು ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ. ಆಕ್ಸಿಜನ್, ನಾನಾ ಆಸ್ಪತ್ರೆಗಳ ಬೆಡ್ ನಿರ್ವಹಣೆ ಸಹ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಆರು ಕೆ ಎಲ್, ಎಲ್ ಎಂ ಒ ಟ್ಯಾಂಕ್ ಮೂಲಕ 208 ಆಕ್ಸಿಜನ್ ಬೆಡ್ ಗಳನ್ನು ಸಹ ನಿರ್ವಹಿಸಲಾಗಿದೆ. ಅದರಂತೆ ಪ್ರತಿ ನಿಮಿಷಕ್ಕೆ 1000 ಲೀಟರ್ ಆಕ್ಸಿಜನ್ ಪೂರೈಸುವ ಪಿ ಎಸ್ ಎಫ್ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದೆ. ಈ ಘಟಕದ ಸಿವಿಲ್ ಕಾಮಗಾರಿಗಳು ನಡೆಯುತ್ತಿವೆ . ಅಲ್ಲದೇ, 13 ಕೆಎಲ್, ಎಲ್ಎಂಒ ಟ್ಯಾಂಕ್ ಮಂಜೂರು ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇಂದ್ರದಿಂದ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು ಮುಂಬರುವ ದಿನಗಳಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸರ್ವರೀತಿಯಿಂದಲೂ ಸನ್ನದ್ಧರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚೆ ಶಶಿಕಲಾ ಜೊಲ್ಲೆ ತಿಳಿಸಿದರು.

ಈ ಸಂದರ್ಭದಲ್ಲಿ ಲೋಕಸಭೆ ಬಿಜೆಪಿ ಸದಸ್ಯ ರಮೇಶ್ಲ ಜಿಗಜಿನಗಿ, ವಿಧಾನ ಪರಿಷತ ಬಿಜೆಪಿ ಸದಸ್ಯರಾದ ಅರುಣ ಶಹಾಪುರ, ಹನುಮಂತ ನಿರಾಣಿ, ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌