ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣ ಕೊರೊನಾ ಲಸಿಕೆ ಲಭ್ಯ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಶಿವಮೊಗ್ಗ: ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಂದಿನ ಒಂದು ವಾರದಲ್ಲಿ ಕೊರೊನಾ ಹತೋಟಿಗೆ ಬರುವ ನಿರೀಕ್ಷೆಯಿದೆ.‌‌ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೊರೊನಾ‌ ಪ್ರಮಾಣ ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲಾ ಮುಂಜಾಗೃತೆ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು.

ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಹಲವು ವರ್ಗಗಳ ಜನರಿಗೆ ಸರಕಾರ ಈಗಾಗಲೇ ಆರ್ಥಿಕ ನೆರವನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಫಲಾನುಭವಿಗಳ ಹಳೆ ಸಾಲ ಬಾಕಿಯನ್ನು ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ಹಣದಿಂದ ಕಡಿತ ಮಾಡಬಾರದು. ಈ ರೀತಿ ಹಳೆ ಸಾಲ ಚುಕ್ತಾ ಮಾಡುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ಶಿಕಾರಿಪುರ ತಾಲೂಕಿನ ಪ್ರಮುಖ ನೀರಾವರಿ ಯೋಜನೆಗಳು ಬಹುತೇಕ ಅಂತಿಮ ಹಂತದಲ್ಲಿವೆ. ಈ ಯೋಜನೆಗಳ ಮೂಲಕ ಬರಪೀಡಿತವಾಗಿರುವ ಉಡುಗುಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ ಬಹುತೇಕ ಕೆರೆಗಳನ್ನು ಈ ಮಳೆಗಾಲದಲ್ಲಿ ತುಂಬಿಸುವ ವಿಶ್ವಾಸ ನನಗಿದೆ. ಶೇ.90ರಷ್ಟು ಕಾಮಗಾರಿಗಳು ಈಗಾಗಲೇ ಮುಗಿದಿದ್ದು, ಈ ಭಾಗದ ಹಲವು ವರ್ಷಗಳ ಕನಸು ಇದರಿಂದ ನನಸಾಗಲಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗಾಗಿ ದೊಡ್ಡ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಹಳಿ ನಿರ್ಮಾಣ ಯೋಜನೆಯನ್ನು ತ್ವರಿತಗೊಳಿಸಬೇಕು. ಭೂಸ್ವಾಧೀನ ಪ್ರಕ್ರಿಯೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಯೋಜನೆ ಅನುಷ್ಟಾನಗೊಳಿಸಬೇಕು. ತಾಲೂಕಿನಲ್ಲಿ ಮಂಜೂರಾಗಿರುವ 10ಕೆವಿ ವಿದ್ಯುತ್ ಸ್ಟೇಷನ್‍ಗಳ ನಿರ್ಮಾಣ ಕಾರ್ಯವನ್ನೂ ಚುರುಕು ಗೊಳಿಸಬೇಕು ಎಂದು ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗದಹ ಲೋಕಸಭೆ ಸದಸ್ಯ ಬಿ. ವೈ. ರಾಘವೇಂದ್ರ ಮಾತನಾಡಿ, ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳು ನಿರೀಕ್ಷೆಯಂತೆ ಅನುಷ್ಟಾನಗೊಳ್ಳುತ್ತಿದೆ. ಉಡುಗುಣಿ ತಾಳಗುಂದ ಏತ ನೀರಾವರಿ ಯೋಜನೆ ಮುಂದಿನ ತಿಂಗಳು ಪೂರ್ಣಗೊಳ್ಳಲಿದೆ. ಕಸಬಾ ನೀರಾವರಿ ಯೋಜನೆ ಶೇ.50ರಷ್ಟು ಪೂರ್ಣಗೊಂಡಿದೆ. ಹೊಸಳ್ಳಿ-ಅಂಜನಾಪುರ ಯೋಜನೆಯ ಪೈಪ್‍ಲೈನ್ ಕಾರ್ಯ ನಡೆಯುತ್ತಿದೆ. ಯೋಜನೆಗೆ ಯಾವುದೇ ಆರ್ಥಿಕ ಅಡಚಣೆ ಇರುವುದಿಲ್ಲ. ತಾಲೂಕಿನಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಇದುವರೆಗೆ ತಾಲೂಕಿನಲ್ಲಿ 45 ಸಾವಿರ ಜನರಿಗೆ ಕೊರೊಬಾ ಮತ್ತು ಐದು ಸಾವಿರ ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ. ಎಲ್. ವೈಶಾಲಿ, ಎಸ್ಪಿ ಲಕ್ಷ್ಮೀ ಪ್ರಸಾದ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌