ಕೃಷ್ಣಾ ನದಿ ನೀರು ಹಂಚಿಕೆ ವಿಚಾರ- ಅಂತಿಮ ಅಧಿಸೂಚನೆಗೆ ಕರ್ನಾಟಕ- ಮಹಾರಾಷ್ಟ್ರ ಜಂಟಿ ಪ್ರಯತ್ನ- ಸಚಿವ ಬೊಮ್ಮಾಯಿ

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ಬ್ರಿಜೇಶ್ ಮಿಶ್ರಾ ನ್ಯಾಯಾಧೀಕರಣ ನೀಡಿರುವ ಐ ತೀರ್ಪಿನ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟಿನಲ್ಲಿ ಜಂಟಿ ಹೋರಾಟಕ್ಕೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಿರ್ಧರಿಸಿವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆಯ ಬಳಿಕ ಅವರು ಮಾತನಾಡಿದರು.

ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲ ನೇತೃತ್ವದ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ

ಕೃಷ್ಣ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಬೃಜೇಶ್ ಮಿಶ್ರಾ ನೇತೃತ್ವದ ನ್ಯಾಯಾಧಿಕರಣ ಐ ತೀರ್ಪು ನೀಡಿದೆ. ಅದರಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ನೀರು ಹಂಚಿಕೆ ಮಾಡಿಕೊಳ್ಳುತ್ತಿವೆ. ಆದರೆ ಈ ಐತೀರ್ಪಿನ ಕುರಿತು ಅಂತಿಮ ಅಧಿಸೂಚನೆ ಇದುವರೆಗೆ ಹೊರಬಿದ್ದಿಲ್ಲ. ಅಂತಿಮ ಅಧಿಸೂಚನೆ ಪ್ರಕಟಗೊಳ್ಳಬೇಕು ಎಂಬುದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳು ಒಟ್ಟಿಗೆ ಕುಳಿತುಕೊಂಡು ಚರ್ಚೆ ಮಾಡಿ ಆದಷ್ಟು ಬೇಗ ಅಧಿಸೂಚನೆ ಹೊರಡಿಸುವ ಸಲುವಾಗಿ ಸುಪ್ರೀಂ ಕೋರ್ಟಿನಲ್ಲಿ ಜಂಟಿ ಪ್ರಯತ್ನ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

ಹೊಸ ಪೋಸ್ಟ್‌