ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿಗೆ ಕೇಂದ್ರ ಹಣಕಾಸು ಸಚಿವೆ ಒಪ್ಪಿಗೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮತ್ತು ಜಿ ಎಸ್ ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸಚಿವೆ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರಕಾರದ ನಾನಾ ಯೋಜನೆಗಳ ಕುರಿತು ನಿರ್ಮಲಾ ಸೀತಾರಾಮನ್ ಜತೆ ಚರ್ಚೆ ನಡೆಸಲಾಯಿತು. ಕೇಂದ್ರ ಸರಕಾರದಿಂದ ನಾನಾ ಯೋಜನೆಗಳಡಿ ರಾಜ್ಯ ಸರಕಾರಕ್ಕೆ ಬಿಡುಗಡೆಯಾಗಬೇಕಿರುವ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿರ್ಮಲಾ ಸೀತಾರಾಮನ್, ತ್ವರಿತ ಗತಿಯಲ್ಲಿ ಕೇಂದ್ರ ಪ್ರಯೋಜಿತ ಯೋಜನೆಗಳಿಗೆ ತನ್ನ ಪಾಲಿನ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಕಳೆದ ವರ್ಷದ ಜಿ ಎಸ್ ಟಿ ಪರಿಹಾರ ಬಾಕಿ ರೂ. 11800 ಕೋ. ಹರಣವನ್ನು ರಾಜ್ಯಕ್ಕೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿಯಂತೆ ಜಿ ಎಸ್ ಟಿ ಪರಿಹಾರ ರೂ. 18000 ಕೋ. ಹಣವನ್ನು ಕೇಂದ್ರ ಸರಕಾರ ಪಡೆದು ರಾಜ್ಯಕ್ಕೆ ಒದಗಿಸುವುದಾಗಿ ನಿರ್ಮಲಾ ಸೀತಾರಾಮನ ಭರವಸೆ ನೀಡಿದ್ದರೆಂದು ಬೊಮ್ಮಾಯಿ ಮಾಹಿತಿ ನೀಡಿದರು.

2021- 22 ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಂಗ್ರಹವಾಗಿರುವ ಜಿ ಎಸ್ ಟಿ ಪಾಲಿನ ಮೊದಲ ಕಂತನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅದಕ್ಕೆ ಸಚಿವರು ಒಪ್ಪಿಗೆ ನೀಡಿದರು. ಕೊರೊನಾ ನಿರ್ವಹಣೆ ಮತ್ತು ಕೊರೊನಾ ಮೂರನೇ ಅಲೆ ತಯಾರಿಗೆ ಬೇಕಾದ ಹಣಕಾಸಿನ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೊರೊನಾ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ಅಭಾವ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಅವರು ನೀಡಿದರು ಎಂದು ಸಚಿವರು ತಿಳಿಸಿದರು.

ರಾಜ್ಯ ಸರಕಾರ ಕೊರೊನಾ ಎರಡನೆ ಅಲೆಯನ್ನು ನಿರ್ವಹಣೆ ಮಾಡಿದ ರೀತಿ, ಬಡವರಿಗೆ ನೀಡಲಾದ ಪ್ಯಾಕೇಜ್, ಕೊರೊನಾದಿಂ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ, ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆದುಕೊಂಡು ನಡೆಸಿದ ಸಮರ್ಥ ನಿರ್ವಹಣೆಯನ್ನು ನಿರ್ಮಲಾ ಸಿತಾರಾಮನ್ ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಭೇಟಿ ಯಶಸ್ವಿಯಾಗಿದೆ. ರಾಜ್ಯದ ಬೇಡಿಕೆಗಳಿಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಿ ಎಸ್ ಟಿ ಪರಿಹಾರದ ಬಾಕಿ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಕೋವಿಡ್ ನಿರ್ವಹಣೆಗೆ ಆರ್ಥಿಕ ನೆರವಿನ ಭರವಸೆ ನೀಡಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌