ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ. 14.33 ಕೋ. ಕ್ರಿಯಾ ಯೋಜನೆಗೆ ಸರಕಾರ ಒಪ್ಪಿಗೆ- ಸಚಿವ ಬೊಮ್ಮಾಯಿ

ಬೆಂಗಳೂರು: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ರೂ. 14. 33 ಕೋ. ವೆಚ್ಚದ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2021- 22 ನೇ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್ ನಲ್ಲಿ ದಾಸಕೂಟ ಸಂಯೋಜನೆ, ಕನಕದಾಸರ ಕುರಿತು ಹಾಲೋಗ್ರಾಂ ಚಲನಚಿತ್ರ ನಿರ್ಮಾಣ ಕಾಮಗಾರಿಗಳ ಕ್ರಿಯಾಯೋಜನೆಗೆ ಈ ಸಭೆಯಲ್ಲಿ ಅನುಮೋದನೆ ನೀಡಲಾಯಿತು ಎಂದು ಸಚಿವ ಸಚಿವರು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ. 65 ಕೋ. ಮೊತ್ತದ ಕ್ರಿಯಾ ಯೋಜನೆಗೆ ಪ್ರಾಧಿಕಾರದ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅನುಮೋದನೆ ನೀಡಿದರು. ಅಲ್ಲದೇ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ ಕಾಮಗಾರಿ, ರಾಕ್ ಗಾರ್ಡನ್ ನಿರ್ಮಾಣ, ಕಲ್ಯಾಣ ಮಂಟಪ ನವೀಕರಣ, ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಮ್ಯೂಜಿಯಂ ವೀರಭೂಮಿ ನಿರ್ಮಾಣ ಕಾಮಗಾರಿ, ರಾಯಣ್ಣನ ಕೆರೆ ಅಭಿವೃದ್ಧಿ ಮಾಡುವ ಕಾಮಗಾರಿಗಳಿಗಾಗಿ ಈ ಹಣವನ್ನು ವಿನಿಯೋಗಿಸುವಂತೆ ಸೂಚಿಸಲಾಯಿತು ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌