ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದಲ್ಲಿ ಪರಿಸರಾಸಕ್ತರ ಉಪಹಾರ ಕೂಟ-ಶೇ. 99 ರಷ್ಟು ಜನ ಪ್ರಕೃತಿಯ ವಿನಾಶದಲ್ಲಿ ತೊಡಗಿದ್ದಾರೆ-ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ ಬಿರಾದಾರ

ವಿಜಯಪುರ: ಪ್ರಕೃತಿ ಉಳಿವಿಗಾಗಿ ಶೇ.1ರಷ್ಟು ಜನ ಮಾತ್ರ ಪ್ರಯತ್ನಗಳನ್ನು ನಡೆಸಿದ್ದಾರೆ. ಉಳಿದ ಶೇ.99 ಜನರು ಪ್ರಕೃತಿಯ ವಿನಾಶದದಲ್ಲಿ ನಿರತರಾಗಿದ್ದಾರೆ. ಆದರೆ ಪ್ರಕೃತಿ ರಕ್ಷಿಸಲು ಪ್ರಯತ್ನಿಸುತ್ತಿರುವ ಶೇ.1ರ ಸಂಖ್ಯೆಯನ್ನು ಪ್ರತಿಶತ 10ಕ್ಕೆ ಏರಿಸಿದರೆ ಜಗತ್ತಿನಲ್ಲಿ ಸಾಕಷ್ಟು ಆರೋಗ್ಯಕರ ಬದಲಾವಣೆಗಳಾಗಿ ಪ್ರಕೃತಿ ವಿಕೋಪಗಳು ತಪ್ಪುತ್ತವೆ ಎಂದು ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ ಬಿರಾದಾರ ಹೇಳಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಮೂಲದ ಡಾ.ಚಂದ್ರಶೇಖರ ಬಿರಾದಾರ ಸದ್ಯ ಈಜಿಪ್ತನಲ್ಲಿ ನೆಲೆಸಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಮತ್ತು ಹವಾಮಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು ಇವರು, ತಾಯ್ನಾಡಿನ ಪ್ರವಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ನಿವಾಸದಲ್ಲಿ ಪರಿಸರ ಆಸಕ್ತರ ಉಪಹಾರ ಕೂಟದಲ್ಲಿ ಪಾಲ್ಗೋಂಡು ಮಾತನಾಡಿದರು.

ವಿಜಯಪುರದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದಲ್ಲಿ ನಡೆದ ಪರಿಸರಾಕ್ತರ ಉಪಹಾರ ಕೂಟದಲ್ಲಿ ಪಾಲ್ಗೋಂಡ ಗಣ್ಯರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿ ನಾಶ ಮಾಡುತ್ತಿರುವುದರಿಂದ ಮಣ್ಣು, ನೀರು, ಹವಾಮಾನಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿ ವಿಷಮಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ಮೊದಲು ನಾವು ತಿನ್ನುವ ಆಹಾರವೇ ವಿಷವಾಗಿದೆ. ಇದನ್ನು ಬದಲಾಯಿಸಬೇಕಿದ್ದು, ಯುವಕರಿಂದ ಮಾತ್ರ ಈ ಬದಲಾವಣೆ ಸಾಧ್ಯ. ನಾನು ಜಗತ್ತಿನ 50 ರಾಷ್ಟ್ರಗಳಲ್ಲಿ ಈ ಬದಲಾವಣೆ ಪ್ರಯೋಗವನ್ನು ಮಾಡಿ ಯಶಸ್ವಿಯೂ ಆಗಿದ್ದೇನೆ. ನನ್ನ ತಾಯ್ನಾಡಿನ ನನ್ನ ಹೆಮ್ಮೆಯ ವಿಜಯಪುರ ಜಿಲ್ಲೆಯಲ್ಲಿ ಈ ಬದಲಾವಣೆ ತರುವ ಕಾರ್ಯವನ್ನು ಎಂ. ಬಿ. ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನದ ಮೂಲಕ ಯಶಸ್ವಿಯಾಗಿ ಮಾಡುತ್ತಿದ್ದಾರೆ. ಭೂತನಾಳ ಕೆರೆಯ ಸುತ್ತಮುತ್ತ ಕಲ್ಲನ್ನು ಕೊರೆದು ಸಸಿ ನೆಟ್ಟು ಬೆಳೆಸಿದ್ದು ಸಣ್ಣ ಸಾಧನೆಯಲ್ಲ. ಅದು ಮಹಾನ್ ಕ್ರಾಂತಿಕಾರಿ ಕೆಲಸ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

ಬಿ ಎಲ್ ಡಿ ಇ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ, ಯುನಿಸ್ಕೋ ಜೀವವಿಜ್ಞಾನ ಪೀಠದ ಮುಖ್ಯಸ್ಥ ಡಾ. ಕುಶಾಲ ದಾಸ ಮಾತನಾಡಿ, ಪ್ರಕೃತಿಯ ರಕ್ಷಣೆಯ ಸಂಶೋಧನೆಗಳಲ್ಲಿ ಅಮೇರಿಕಾ, ಯೂರೋಪಿಯನ್ ರಾಷ್ಟ್ರಗಳು ಮುಂದಿದ್ದರೂ, ರಕ್ಷಣೆಯ ಕಾರ್ಯದಲ್ಲಿ ಮುಂದಾಗಿರುವುದು ಕಡಿಮೆ. ಏಷ್ಯಾ, ಆಫ್ರಿಕಾದ ಕಾಡಿನ ಜನರೇ ಈ ಪ್ರಕೃತಿಯ ರಕ್ಷಕರು. ಏಕೆಂದರೆ ಅವರ ಹೃದಯದಲ್ಲಿಯೇ ಪ್ರಕೃತಿ ತುಂಬಿಕೊಂಡಿರುತ್ತದೆ. ಜಾಗತೀಕ ತಾಪಮಾನ ಸೇರಿದಂತೆ ಜಗತ್ತಿನ ಹಲವು ಗಂಭೀರ ಪ್ರಾಕೃತಿಕ ಸಮಸ್ಯೆಗಳಿಗೆ ಅಮೇರಿಕಾ ಅಧ್ಯಕ್ಷರೇ ಯೂಟರ್ನ್ ತೆಗೆದುಕೊಂಡಿರುವುದು ಅವರ ದ್ವಂಧ್ವ ನೀತಿಯನ್ನು ತೋರುತ್ತದೆ ಎಂದು ಹೇಳಿದರು.

ವಿಜಯಪುರದ ತಮ್ಮ ನಿವಾಸಕ್ಕೆ ಬಂದ ಪರಿಸರಾಸಕ್ತರೊಂದಿಗೆ ಮಾಜಿ ಸಚಿವ ಎಂ. ಬಿ. ಪಾಟೀಲ

ಮಾಜಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ. ಜಗತ್ತಿನ ಹಲವು ರಾಷ್ಟ್ರಗಳ ಪ್ರಯೋಗಕ್ಕೂ ಭಾರತಕ್ಕೂ ತೀವ್ರ ವ್ಯತ್ಯಾಸವಿದೆ. 130 ಕೋಟಿ ಜನಸಂಖ್ಯೆ ಭಾರತದಲ್ಲಿ ಇಲ್ಲಿನ ಪರಿಸ್ಥಿತಿಗಳಲ್ಲಿ ನಾವು ಪರಿಸರ ಅಳಿವು-ಉಳಿವು ಕುರಿತು ಮಾತನಾಡುವುದೇ ದುಸ್ಥರವಾಗಿದೆ. ಅಧಿಕಾರ ನಡೆಸುವ ನಾಯಕರು, ನಾನಾ ಇಲಾಖೆಗಳ ಮುಖ್ಯಸ್ಥರು ಹೇಗೆ ಕ್ರೀಯಾಶೀಲರಾಗಿ ಕಾರ್ಯ ಮಾಡುತ್ತಾರೆಯೋ ಹಾಗೆಯೇ ಆ ಇಲಾಖೆ, ಅಧಿಕಾರಿಗಳು ಅದನ್ನು ಅನುಸರಿಸುತ್ತಾರೆ. ಆದರೆ ಇಲ್ಲಿನ ಸ್ಥಿತಿಗತಿಗಳು ಸರಿ ಇಲ್ಲ ಎಂದು ನಾವು ಭಾವಿಸದೇ ಆಶಾವಾದದಿಂದ ಪ್ರಯತ್ನಕ್ಕೆ ಮುಂದಾಗಬೇಕು. ಆಗ ಯಶಸ್ಸು ಖಂಡಿತ ಸಾಧ್ಯ. ಕೋಟಿವೃಕ್ಷ ಅಭಿಯಾನವೇ ಇದಕ್ಕೆ ಉತ್ತಮ ಉದಾಹರಣೆ. ಐದು ವರ್ಷಗಳ ಹಿಂದೆ ಅರಣ್ಯ ಇಲಾಖೆ ನರ್ಸರಿಗಳಲ್ಲಿ ಬೆಳೆದ ಸಸಿಗಳನ್ನು ತೆಗೆದುಕೊಂಡು ಹೋಗುವವರು ಇರಲಿಲ್ಲ. ಇತ್ತೀಚಿಗೆ ಸಸಿಗಳನ್ನು ಹಂಚಲು ಆರಂಭಿಸಿದ 2-3 ದಿನಗಳಲ್ಲಿ ಹತ್ತಾರು ಲಕ್ಷ ಸಸಿಗಳು ಖಾಲಿಯಾಗುತ್ತಿವೆ. ಇದರಿಂದ ಜಿಲ್ಲೆಯ ಪರಿಸರದಲ್ಲಿ ಉತ್ತಮ ಬದಲಾವಣೆ ಬಂದಿದೆ ಎಂದು ತಿಳಿಸಿದರು.

ವಿಜ್ಞಾನಿ ಚಂದ್ರಶೇಖರ ಅವರು ಜಿಲ್ಲೆಯ, ರಾಜ್ಯದ ಪರಿಸರ ಪೂರಕವಾಗಿ ನೀಡಿರುವ ಸಲಹೆಗಳನ್ನು ಕ್ರೋಢಿಕರಿಸಿ, ಆದ್ಯತೆಯ ಮೆರೆಗೆ ಅವುಗಳನ್ನು ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರ ಗಮನ ಸೆಳೆಯಲಾಗುವುದು ಎಂದು ಎಂ. ಬಿ. ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ಪಿ. ಕೆ. ಪೈ, ಎನ್. ಕೆ. ಬಾಗಯತ, ಮಹೇಶ ಪಾಟೀಲ, ಪ್ರಭುಲಿಂಗ, ಎನ್. ಡಿ. ಪಾಟೀಲ ಡೋಮನಾಳ, ಶರದ ರೂಡಗಿ, ಡಾ. ಮಹಾಂತೇಶ ಬಿರಾದಾರ, ಡಾ. ಮುರುಗೇಶ ಪಟ್ಟಣಶೆಟ್ಟಿ, ಬಸವರಾಜ ಬಿರಾದಾರ, ಪರುಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಪಾಲ್ಗೊಂಡರು.

Leave a Reply

ಹೊಸ ಪೋಸ್ಟ್‌