ಆ. 14 ರಂದು ಲೋಕ್ ಅದಾಲತ್‌ನಲ್ಲಿ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ- ವಿಜಯಪುರ ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಎಸ್. ಎನ್. ನಾಯಕ

ವಿಜಯಪುರ: ವಿಜಯಪುರ ಜಿಲ್ಲಾದ್ಯಂತ ಆ. 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಸ್. ಎನ್ ನಾಯಕ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪರ್ಯಾಯ ವ್ಯಾಜ್ಯಗಳ ಕೇಂದ್ರದ ಸಭಾಂಗಣದಲ್ಲಿ ಆ. 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರು ಇದರ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ರಾಷ್ಟ್ರೀಯ ಲೋಕ್ ಅದಾಲತ್‌ನಿಂದ ಕಕ್ಷಿದಾರರಿಗೆ ಬಹಳ ಅನುಕೂಲವಾಗಲಿದ್ದು, ಸಮಯ ಹಾಗೂ ಹಣದ ಉಳಿತಾಯವಾಗುತ್ತದೆ. ಅಲ್ಲದೇ ನ್ಯಾಯಾಲಯಕ್ಕೆ ಹಾಗೂ ವಕೀಲರಿಗೆ ಯಾವುದೇ ವೆಚ್ಚ ನೀಡಬೇಕಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಲೋಕ್ ಅದಾಲತ್‌ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ ಯಾವುದೇ ಅವಕಾಶವಿರುವುದಿಲ್ಲ. ವಿಚ್ಛೇದನ ಹೊರತುಪಡಿಸಿ ಜೀವನಾಂಶ ಹಾಗೂ ವಿವಾಹ ಪ್ರಕರಣಗಳನ್ನು ಕಕ್ಷಿದಾರರಿಗೆ ರಾಜಿ ಮೂಲಕ ಇತ್ಯರ್ಥ ಪಡಿಸಲಾಗುವುದು. ಮೋಟರ್ ವೆಹಿಕಲ್ ಪ್ರಕರಣ, ಬ್ಯಾಂಕ್ ಚೆಕ್ ಬೌನ್ಸ್, ವಿದ್ಯುತ್ ಕಳ್ಳತನದಂಥ ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸಲಾಗುತ್ತದೆ. ಕೆಲವು ಕ್ರಿಮಿನಲ್ ಹಾಗೂ ಸಿವಿಲ್ ಪ್ರಕರಣಗಳನ್ನೂ ಇತ್ಯರ್ಥಪಡಿಸಲಾಗುತ್ತದೆ. ಕಕ್ಷಿದಾರರಲ್ಲದಿದ್ದರೂ ಕೂಡ ಯಾವುದಾದರೂ ವ್ಯಾಜ್ಯವಿದ್ದರೂ ಪರಿಹರಿಸಿಕೊಳ್ಳಬಹುದು. ಇದೆಲ್ಲದರಿಂದಾಗಿ ಸಮಾಜದಲ್ಲಿ ಎಲ್ಲರೂ ಶಾಂತಿಯುತವಾಗಿ ಬದುಕಲು ಅವಕಾಶವಾಗುತ್ತದೆ ಎಂದು ಅವರು ತಿಳಿಸಿದರು.

ಆ. 14 ರ ಲೋಕ್ ಅದಾಲತ್ ರಾಷ್ಟ್ರ ಮಟ್ಟದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಏಕಕಾಲಕ್ಕೆ ನಡೆಯುತ್ತಿದೆ. ಎರಡನೇ ಶನಿವಾರ ಸರಕಾರಿ ರಜೆ ಇದ್ದರೂ ಕೂಡ ಇದು ನಡೆಯುತ್ತಿರುವುದು ಬಹಳ ವಿಶೇಷವಾಗಿದೆ. ಆದ್ದರಿಂದ ಕಕ್ಷಿದಾರರು ರಜೆ ಎಂಬಿತ್ಯಾದಿ ಗೊಂದಲಗಳಿಗೆ ಒಳಗಾಗಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದರು.

ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ 28801 ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಿ ರೂ. 2346718 ಪರಿಹಾರ ಒದಗಿಸಲಾಗಿದೆ. ನ್ಯಾಯಾಲಯದಲ್ಲಿ 68100 ಪ್ರಕರಣಗಳು ಬಾಕಿ ಉಳಿದಿವೆ ಎಂದು ಎಸ್. ಎನ್. ನಾಯಕ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌