ಪೆಟ್ರೋಲ್ ಮೇಲಿನ ಸೆಸ್ ಕಡಿತ ಮಾಡುವ ಯೋಚನೆ ಇಲ್ಲ- ಸಿಎಂ‌ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ಸೆಸ್ ದರವನ್ನು ಕಡಿತಗೊಳಿಸುವ ಯೋಚನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ‌ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪೆಟ್ರೋಲ್ ಮೇಲಿನ ಸೆಸ್ ನ್ನೂ ರೂ. 3 ಕಡಿತ ಮಾಡಲಾಗಿದೆ. ರಾಜ್ಯದಲ್ಲಿ ಸರಕಾರ ಈ ರೀತಿ ಕಡಿತ ಮಾಡಲಿದೆಯಾ ಎಂಬ ಪ್ರಶ್ನೆಗೆ, ಆ ರೀತಿ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಂದು ನಾಲ್ಕು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ನಾಳೆ ಮತ್ತೆ ಮೂರು ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡುತ್ತೇನೆ. ಈಗ ನಡೆದಿರುವ ಅಭಿವೃದ್ಧಿ ಕಾರ್ಯಗಳ ವೇಗವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇನೆ. ಮೂಲಭೂತ ಸೌಕರ್ಯಗಳು ಆರ್ಥಿಕ ಚಟುವಟಿಕೆಗಳಿಗೆ ಇಂಬು ನೀಡುತ್ತವೆ. ಬಡವರಿಗಾಗಿ ನಾನಾ ಕಾರ್ಯಕ್ರಮಗಳ ಮೂಲಕ ಅವರ ಸಾಮಾಜಿಕ ಸ್ಥಿತಿ ಸುಧಾರಣೆ ಪ್ರಾರಂಭ ಮಾಡಿದ್ದೇನೆ. ಕೆಲವೇ ದಿನಗಳಲ್ಲಿ ನಮ್ಮ ಸರಕಾರ ಈ ಕೆಲಸಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌