ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ- ಸಂರಕ್ಷಿತ ದರ ಒದಗಿಸಲು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಒತ್ತು ನೀಡುವುದು ಮತ್ತು ತಾಳೆ ಬೆಳೆಗೆ ಉತ್ತೇಜನ, ಕೃಷಿ ಉತ್ಪನ್ನ ಸಂಸ್ಕರಣೆ ರಫ್ತಿಗೆ ಒತ್ತು ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಕೃಷಿ ವಿಷಯಗಳ ಕುರಿತು ಚರ್ಚೆ ನಡೆಸಿದರು. ಚರ್ಚಿಸಲಾಯಿತು.

ರಾಜ್ಯದಲ್ಲಿ ಎಣ್ಣೆಕಾಳು ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಆದರೆ ರೈತರಿಗೆ ವೈಜ್ಞಾನಿಕ ತರಬೇತಿ ಹಾಗೂ ಹೆಚ್ಚಿನ ಬೆಂಬಲದ ಅಗತ್ಯವಿದೆ. ಬೆಲೆಯಲ್ಲಿ ಭಾರಿ ಏರುಪೇರಾಗುವುದರಿಂದ ಉತ್ತಮ ಬೆಲೆ ಖಾತರಿ ಪಡಿಸಲು ಕ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ರೈತರು ನಮ್ಮ ದೇಶದಲ್ಲಿ ಬೆಳೆಯುವ ಬೆಳೆಗಳ ಆಮದಿಗೆ ತೆರಿಗೆ ವಿಧಿಸುವ ಮೂಲಕ ದೇಶದ ರೈತರಿಗೆ ನೆರವು ನೀಡಬೇಕು ಎಂದು ಅವರು ತಿಳಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಸನ್ಮಾನಿಸಿದರು.

ಎಣ್ಣೆ ಕಾಳುಗಳ ಬಿತ್ತನೆ ಬೀಜಗಳ ಗುಣಮಟ್ಟ ಖಾತರಿ ಪಡಿಸಲು ಹಾಗೂ ಉತ್ಪಾದಕತೆ ಹೆಚ್ಚಿಸಲು ಸಹ ಆದ್ಯತೆ ನೀಡಬೇಕಾಗಿದೆ. ಈ ಕುರಿತು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಬೇಕು. ಎಣ್ಣೆ ಬೀಜ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರಕಾರದ ಬೆಂಬಲ ಅಗತ್ಯ. ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಸಂರಕ್ಷಿತ ದರ ಒದಗಿಸುವ ಬಗ್ಗೆ ನಿರ್ದಿಷ್ಟವಾಗಿ ನೀತಿ ರೂಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೃಷಿ ಉತ್ಪನ್ನಗಳ ರಫ್ತಿಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಅಲ್ಲದೇ, ರಾಜ್ಯದ ಕೈಗಾರಿಕೆ ಇಲಾಖೆಯ ವ್ಯಾಪ್ತಿಯ ರಫ್ತು ಉತ್ತೇಜನ ಸಂಸ್ಥೆಗಳು ಕೃಷಿ ಉತ್ಪನ್ನಗಳ ರಫ್ತಿಗೆ ಬೆಂಬಲ ನೀಡುವಂತೆ ಸಲಹೆ ನೀಡಿದರು.

ಸಮುದ್ರ ಹಾಗೂ ಒಳನಾಡು ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31 ರೊಳಗೆ ಮೀನುಗಾರರಿಗೆ 100 ಡೀಪ್ ಸೀ ಟ್ರಾಲರ್ಸ್ ಒದಗಿಸುವ ಕುರಿತು ಯೋಜನೆ ರೂಪಿಸುವಂತೆ ಮೀನುಗಾರಿಕೆ ಇಲಾಖೆಗೆ ನಿರ್ದೇಶನ ನೀಡಿದರು.

ಮೀನುಗಾರ ಸ್ನೇಹಿ ನೀತಿ ರೂಪಿಸುವ ಕುರಿತು ಒಳನಾಡು ಮೀನುಗಾರಿಕೆಯಲ್ಲಿ ಸ್ಥಳೀಯವಾಗಿ ಉತ್ತಮ ಮೀನುಮರಿಗಳ ತ್ಪಾದನೆಗೆ ಒತ್ತು ನೀಡುವುದು, ಕೃಷಿ ಮತ್ತು ತೋಟಗಾರಿಕೆ ವಿವಿಗಳ ನಡುವೆ ಉತ್ತಮ ಸಮನ್ವಯ ಸಾಧಿಸಿ, ರೈತರಿಗೆ ಅನುಕೂಲ ಕಲ್ಪಿಸುವುದು ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯದಲ್ಲಿ 10 ಕೃಷಿ-ಹವಾಮಾನ ವಲಯಗಳನ್ನು ಆಧರಿಸಿ ಸಂಶೋಧನೆ ನಡೆಸುವಂತಾಗಬೇಕು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ರೈತರ ಜಮೀನಿನಲ್ಲಿ ಬೆಳೆದಿರುವ ಕೃಷಿ ಅರಣ್ಯದಲ್ಲಿ ಮರ ಕಡಿಯಲು, ಮಾರಾಟ ಮಾಡಲು ಇತರ ರಾಜ್ಯಗಳಲ್ಲಿ ಅವಕಾಶವಿದೆ. ಆದರೆ ಕರ್ನಾಟಕದಲ್ಲಿ ಕಠಿಣ ನಿಯಮಗಳಿವೆ. ರೈತರ ಸ್ವಂತ ಬಳಕೆಗೆ ಈ ಮರಗಳನ್ನು ಕಡಿಯಲು ಸಹ ಅನಾನುಕೂಲವಾಗುತ್ತಿರುವ ಬಗ್ಗೆ ಕೇಂದ್ರ ಸಚಿವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಈ ಬಗ್ಗೆ ನಿಯಮಗಳನ್ನು ಸಡಿಲಿಸಲು ಪರಿಶೀಲಿಸುವುದಾಗಿ ಸಿಎಂ ತಿಳಿಸಿದರು.

ಈ ಸಭೆಯಲ್ಲಿ ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ. ತೋಟಗಾರಿಕೆ ಸಚಿವ ಮುನಿರತ್ನ. ಕೇಂದ್ರ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಸುಮಿತಾ ಬಿಸ್ವಾಸ್. ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯ, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌