ರಾಜ್ಯದ ಆಂತರಿಕ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ರಾಜ್ಯದ ಆಂತರಿಕ ಸುರಕ್ಷತೆಯನ್ನು ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯ ಜಿ ಎಂ ಐ ಟಿ ಆವರಣದಲ್ಲಿ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿ ಎಂ ಐ ಟಿ ಕೇಂದ್ರ ಗ್ರಂಥಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ತನ್ನ ಪಾತ್ರವನ್ನು ವಹಿಸಬೇಕಾಗಿದೆ. ಭಯೋತ್ಪಾದಕರು ದಕ್ಷಿಣ ಭಾರತದಲ್ಲಿ ತಮ್ಮ ಬೇರುಗಳನ್ನು ಬಿಡಲು ಪ್ರಯತ್ನಿಸಿದಾಗ ನಾವು ಅವರನ್ನು ಸದೆ ಬಡಿದಿದ್ದೇವೆ. ಎನ್ ಐ ಎ ಯೊಂದಿಗೆ ಇಲ್ಲಿ ಅಂಥ ಹಲವಾರು ಸಂಘಟನೆಗಳನ್ನು ಪತ್ತೆ ಹಚ್ಚಿ ಉಗ್ರ ಕ್ರಮ ಕೈಗೊಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಕಳೆದ ಬಾರಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಪರಾಧ ನಿಯಂತ್ರಣಕ್ಕೆ ಸಂಚಾರಿ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಅಪರಾಧ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ಸೃಜನೆಯನ್ನು ಗೃಹ ಇಲಾಖೆ ಕೈಗೊಂಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ದಾವಣಗೆರೆಯಲ್ಲಿ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ , ಜಿಎಂಐಟಿ ಕೇಂದ್ರ ಗ್ರಂಥಾಲಯದ ಉದ್ಘಾಟನೆ.

ಪೊಲೀಸ್ ಶಾಲೆ ಉದ್ಗಾಟನೆ

ದಾವಣಗೆರೆಯಲ್ಲಿ ಪೊಲೀಸ್ ಶಾಲೆಯನ್ನು ಕೇಂದ್ರ ಗೃಹ ಸಚಿವ ಉದ್ಘಾಟಿಸಿದ್ದು ಸಂತಸ ತಂದಿದೆ. ಬೆನೊವೆಲೆಂಟ್ ಫಂಡ್‍ನಿಂದ ನಿರ್ಮಿಸಲಾದ ಪೊಲೀಸ್ ಶಾಲೆಯಲ್ಲಿ ಗುಣಮಟ್ಟದ ಹಾಗೂ ಶಿಸ್ತಿನ ಶಿಕ್ಷಣ ಕೂಡಿದ್ದು, ಭಾರತದಲ್ಲಿನ ಮಿಲಿಟರಿ ಶಾಲೆಗಳ ಮಾದರಿಯಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಗಾಂಧಿ ಭವನ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅರ್ಥಪೂರ್ಣ ಆಚರಣೆಗೆ ಆಗಬೇಕು ಎಂದು ಹೇಳಿದ ಮುಖ್ಯಮಂತ್ರಿಗಳು, ಭಾರತದ ಸ್ವಾತಂತ್ರ್ಯದ 100 ವರ್ಷಕ್ಕೆ ಭಾರತ ವಿಶ್ವಮಾನ್ಯ ರಾಷ್ಟ್ರವಾಗಬೇಕು. ದೇಶವನ್ನು ಸುರಕ್ಷಿತ ಹಾಗೂ ಅಭಿವೃದ್ಧಿಗೊಳಿಸುವ ಸಂಕಲ್ಪ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಧಿ ಭವನ ಉದ್ಘಾಟನೆ ಮಾಡಲಾಗಿದೆ. ಮಹಾತ್ಮಾ ಗಾಂಧಿಜೀ ಜನಿಸಿದ ಭೂಮಿಯಿಂದ ಬಂದಿರುವ ಅಮಿತ್ ಶಾ ಅವರಿಂದಲೇ ಗಾಂಧಿ ಭವನ ಉದ್ಘಾಟನೆಗೊಂಡಿರುವುದು ನಮ್ಮ ಸುಯೋಗ ಎಂದು ಅವರು ತಿಳಿಸಿದರು.

ದಾವಣಗೆರೆಯಲ್ಲಿ ಮೂರು ಜನ ಸ್ವಾತಂತ್ರ್ಯ ಯೋಧರನ್ನು ಸನ್ಮಾನಿಸಿದ ಅಮಿತ ಶಾ, ಬೊಮ್ಮಾಯಿ.

 

 

ಸ್ವಾತಂತ್ರ್ಯ ಹೋರಾಟಗಾರನ್ನು ಈ ಸಂದರ್ಭದಲ್ಲಿ ಗೌರವಿಸುತ್ತಿರುವುದು ಸ್ತುತ್ಯಾರ್ಹ. 75 ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ 14 ಅಮೃತ ಯೋಜನೆಯನ್ನು ಘೋಷಣೆ ಮಾಡಿದ್ದೇನೆ. ಈ ಯೋಜನೆಗಳ ಅನುಷ್ಠಾನಕ್ಕೆ ಆದೇಶವನ್ನು ಈಗಾಗಲೇ ಹೊರಡಿಸಲಾಗಿದೆ. ನಮ್ಮದು ಮಾತನಾಡುವ ಸರಕಾರವಲ್ಲ. ಕಾರ್ಯ ಮಾಡುವ ಸರಕಾರ. ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ, ರೂ. 1000 ಕೋ. ವೆಚ್ಚದಲ್ಲಿ ರೈತ ಮಕ್ಕಳಿಗೆ ಪಿಯುಸಿಯಿಂದ ಪಿಜಿ ವರೆಗೂ ವಿದ್ಯಾರ್ಥಿ ವೇತನ ನೀಡುವ ಯೋಜನೆಯನ್ನು ಕೇಂದ್ರ ಕೃಷಿ ಸಚಿವರು ಉದ್ಘಾಟಿಸಲಿದ್ದಾರೆ. ಕೆಲವೇ ದಿನಗಳಲ್ಲಿ 20 ಲಕ್ಷ ರೈತ ಮಕ್ಕಳಿಗೆ ಈ ಸೌಲಭ್ಯ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ, ವಿಧವಾ ವೇತನ ಮಾಸಾಶನ ಹೆಚ್ಚಿಸುವ ಮೂಲಕ ನಮ್ಮದು ಬಡವರ ಪರವಾದ ಸರಕಾರ ಎಂದು ನಿರೂಪಿಸಲಾಗಿದೆ. ನಮ್ಮ ನಾಯಕರಾದ ಬಿ. ಎಸ್. ಯಡಿಯೂರಪ್ಪ ಅವರು ಆಯವ್ಯಯದಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಅವರ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಜಿಎಂಐಟಿ ಕೇಂದ್ರ ಗ್ರಂಥಾಲಯ

ಸಂಸದರಾದ ಜಿ. ಎಂ. ಸಿದ್ದೇಶ್ವರ ಅವರು ಪ್ರಗತಿಪರ ನಾಯಕರಾಗಿದ್ದು, ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ನೀರಾವರಿ ಯೋಜನೆಗಳು, ಕೇಂದ್ರ ಯೋಜನೆಗಳು, ರಸ್ತೆ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿಯ ಕ್ರಾಂತಿಯನ್ನು ಮಾಡಿದ್ದಾರೆ. ಜಿಎಂಐಟಿ ಆವರಣದಲ್ಲಿ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟನೆಯಾಗಿದೆ. ಜಿ. ಎಂ. ಸಿದ್ದೇಶ್ವರ್ ಅವರಂಥ ಅತ್ಯಂತ ಕ್ರಿಯಾಶೀಲ ವ್ಯಕ್ತಿಯ ನಾಯಕತ್ವದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಲ್ಲಭಭಾಯಿ ಪಟೇಲರ ದಿಟ್ಟತನ ಅಮಿತ್ ಷಾ ಅವರಲ್ಲಿ ಕಾಣಬಹುದು

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೇಶದ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಹೆಸರು ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲಿದೆ. ನಮ್ಮ ದೇಶ ವಲ್ಲಭಬಾಯಿ ಪಟೇಲರಲ್ಲಿ ದೇಶದ ಅಖಂಡತೆ ಮತ್ತು ಏಕತೆಗೆ ಕೆಲಸ ಮಾಡಿದರು. ಅವರಲ್ಲಿ ಕಾಣುತ್ತಿದ್ದ ದಿಟ್ಟತನವನ್ನು ಅಮಿತ್ ಷಾ ಅವರಲ್ಲಿ ಕಾಣಬಹುದಾಗಿದೆ. ನಮ್ಮ ನೆರೆಯ ಆಫ್ಘಾನಿಸ್ತಾನದಲ್ಲಿ ಹೆಣ್ಣು ಮಕ್ಕಳು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ. ಅಲ್ಲಿ ಉಂಟಾಗಿರುವ ಪರಿಸ್ಥಿತಿ ನಮ್ಮ ದೇಶದಲ್ಲಿ ಆಗಬಾರದು ಎಂದು ಅತ್ಯಂತ ದಿಟ್ಟತನದಿಂದ 370ನೇ ವಿಧಿಯನ್ನು ರದ್ದುಗೊಳಿಸಿ ಇಡೀ ರಾಷ್ಟ್ರದ ಅಖಂಡತೆ, ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

Leave a Reply

ಹೊಸ ಪೋಸ್ಟ್‌