ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ- ಅಮಿತ್ ಶಾ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಪಂಚದಲ್ಲಿಯೇ ಕೊರೊನಾವನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದೇವೆ. ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ ಮತ್ತು ಮಾನವಕುಲಕ್ಕೆ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರಕಾರಕ್ಕೆ ಶಹಬ್ಬಾಶಗಿರಿ ನೀಡಿದರು.

ಕೊರೊನಾ ನಿರ್ಹವಣೆಗೆ ರಾಜ್ಯ ಸರಕಾರಕ್ಕೆ ಶಹಬ್ಬಾಷಗಿರಿ

ಕರ್ನಾಟಕ ಮೊದಲಿಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮತ್ತು ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಿದೆ. ಈ ವರೆಗೆ ಸುಮಾರು 5.20 ಕೋಟಿ ಜನರಿಗೆ ಲಸಿಕೆ ಕೋವಿಡ್ ಲಸಿಕೆ ನೀಡಲಾಗಿದೆ. ಆ ಪೈಕಿ 4 ಕೋಟಿ ಜನರಿಗೆ ಮೊದಲ ಡೋಸ್ ನೀಡಲಾಗಿದ್ದು, 1.16 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆಯನ್ನೂ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ. 90ಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡುವ ವಿಶ್ವಾಸ ನನಗಿದೆ. ಒಟ್ಟಾರೆ ಕೊರೊನಾ ವಿರುದ್ಧ ಕರ್ನಾಟಕ ರಾಜ್ಯ ಸರಕಾರ ಅತ್ಯುತ್ತಮವಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವಾದ್ಯಂತ ಸರಕಾರಗಳು ಕೋರೊನಾ ವಿರುದ್ಧ ಹೋರಾಡುತ್ತಿದ್ದರೆ, ಭಾರತದಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳ ಜೊತೆಗೆ ದೇಶದ 130 ಕೋಟಿ ಜನತೆ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೋವಿಡ್ ವಾರಿಯರಗಳು, ರಕ್ಷಣಾ ಸಿಬ್ಬಂದಿ ಹಾಗೂ ಸಫಾಯಿ ಕರ್ಮಚಾರಿಗಳು ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಠಿಣ ನಿರ್ಬಂಧಗಳನ್ನು ಪಾಲಿಸಿದ್ದೇವೆ. ನಂತರ ಜಗತ್ತಿನ ಅತಿ ದೊಡ್ಡ ಲಸಿಕಾ ಅಭಿಯಾನ ನಮ್ಮ ದೇಶದಲ್ಲಿ ಪ್ರಾರಂಭವಾಯಿತು. ಇಂದು ನಾವು ವಿಶ್ವದಲ್ಲಿಯೇ ಅತಿ ಹೆಚ್ಚು ಲಸಿಕೆ ನೀಡಿದ ದೇಶವೆಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ದೇಶದಲ್ಲಿ ಲಸಿಕೆ ಅಭಿಯಾನವನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸಲಾಗಿದ್ದು, ಎರಡು ದಿನಗಳ ಹಿಂದೆ ಒಂದೇ ದಿನದಲ್ಲಿ 1.36 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡುವ ಮೂಲಕ ನಮ್ಮ ದೇಶದ ದಾಖಲೆಯನ್ನೇ ಮುರಿದು ಹೊಸ ದಾಖಲೆ ನಿರ್ಮಿಸಿದ್ದೇವೆ ಎಂದು ಅವರು ತಿಳಿಸಿದರು.

ನರೇಂದ್ರ ಮೋದಿ ಸರಕಾರ ಸದಾ ಹಿಂದುಳಿದ ವರ್ಗಗಳು, ದಲಿತರು, ಬುಡಕಟ್ಟು ಜನರ ಹಿತ ಚಿಂತನೆ ಮಾಡುತ್ತದೆ. ಕೋವಿಡ್-19 ಸಂಕಷ್ಟದ ಹೆಚ್ಚಿನ ಹೊರೆ ಬಡವರ ಮೇಲೆ ಬಿದ್ದಿದೆ. ಪ್ರತಿದಿನ ದುಡಿದು ತಿನ್ನುವವರಿಗೆ ಊಟಕ್ಕಿಲ್ಲದ ಸ್ಥಿತಿ ಎದುರಾಗಿತ್ತು. ಆದರೆ ಮೊದಲನೇ ಅಲೆ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ ಮೇ ತಿಂಗಳಿನಿಂದ ನವೆಂಬರ್ ತಿಂಗಳ ವರೆಗೆ ತಲಾ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸುವ ಕೆಲಸವನ್ನು ನರೇಂದ್ರ ಮೋದಿ ಸರಕಾರ ಮಾಡಿದೆ. 80 ಕೋಟಿ ಜನರಿಗೆ 10 ತಿಂಗಳ ಕಾಲ ಆಹಾರ ಧಾನ್ಯ ಉಚಿತವಾಗಿ ವಿತರಿಸಲಾಗಿದೆ ಎಂದು ಅವರು ಹೇಳಿದರು.

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕದ ಕೊರತೆಯ ಸಮಸ್ಯೆ ದೇಶದೆಲ್ಲೆಡೆ ತಲೆದೋರಿತು. ಆಗ ಸಾವಿರಾರು ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಯಿತು. ಮುಂದೆ ಎದುರಾಗಬಹುದಾದ ಆಕ್ಸಿಜನ್ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಭಾರತ ಆತ್ಮ ನಿರ್ಭರತೆಯನ್ನು ಸಾಧಿಸಲಿದೆ ಎಂಬುದನ್ನು ಅತ್ಯಂತ ವಿಶ್ವಾಸದಿಂದ ಹೇಳಬಲ್ಲೆ ಎಂದು ಅಮಿತ್ ಶಾ ತಿಳಿಸಿದರು.

ಕೊರೊನಾ ವಿರುದ್ಧ ಕೇಂದ್ರ, ರಾಜ್ಯ ಸರಕಾರಗಳು ನಡೆಸುವ ಹೋರಾಟದಲ್ಲಿ ಜನರ ಸಹಯೋಗ ಅತಿ ಅಗತ್ಯವಾಗಿದೆ. ಕೆಲವು ವರ್ಗ, ಸಮುದಾಯ, ಕೆಲವು ಜಿಲ್ಲೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಕೆ ಕಂಡು ಬರುತ್ತಿದೆ. ಇದನ್ನು ನಿವಾರಿಸಿ, ನಮ್ಮ ಕುಟುಂಬದವರು, ಬಳಗದವರು, ನೆರೆಹೊರೆಯವರು ಯಾವುದೇ ಅಳುಕಿಲ್ಲದೆ ಲಸಿಕೆ ಪಡೆಯುವ ವಾತಾವರಣ ನಿರ್ಮಿಸುವ ಹೊಣೆಗಾರಿಕೆ ನಮ್ಮ ನಿಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು.

ಶೇಕಡ ನೂರರಷ್ಟು ಲಸಿಕೆ ನೀಡುವುದೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸುವ ಮಾರ್ಗ. ಕೇಂದ್ರ ಸರಕಾರ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಒದಗಿಸುತ್ತಿದೆ. ಲಸಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಿ, ಲಸಿಕೆ ಹಾಕಿಸಿ ಕೊಳ್ಳುವಂತೆ ಜನರ ಮನವೊಲಿಸಲು ಸಾರ್ವಜನಿಕರು ಮತ್ತು ವಿಶೇಷವಾಗಿ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಸದಸ್ಯರು, ದಾವಣಗೆರೆ ಬಿಜೆಪಿ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌