ರಾಜ್ಯಾದ್ಯಂತ ಶೇ. 71 ರಷ್ಟು ಜನರಿಗೆ ಕೊರೊನಾ ಲಸಿಕೆ ಮೊದಲ ಡೋಸ್ ಪೂರ್ಣ- ಸೆ. 17 ರಂದು ಬೃಹತ್ ಲಸಿಕೆ ಅಭಿಯಾನ- ಸಿಎಂ

ಬೆಂಗಳೂರು: ಸೆ. 17 ರಂದು ಶುಕ್ರವಾರ ರಾಜ್ಯಾದ್ಯಂತ ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕಲು ನಿರ್ಧರಿಸಲಾಗಿದೆ.  ಆ ಹಿನ್ನಲೆಯಲ್ಲಿ ಅದಕ್ಕೆ ಬೇಕಾದ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಮಾತನಾಡಿದರು.

 

ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಇದೆ. ಅಲ್ಲದೇ, ಪ್ರತಿದಿನ ಐದು ಲಕ್ಷ ಜನರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ ಅವರು, ಬೃಹತ್ ಲಸಿಕೆ ಅಭಿಯಾನದ ದಿನ ಕೇಂದ್ರ ಸರಕಾರ ಒಂದೇ ದಿನ 2 ರಿಂದ 3 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದೆ. ಲಸಿಕೆ ಪೂರೈಕೆಗೆ ಕೇಂದ್ರ ಸರಕಾರಕ್ಕೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರಕಾರ ಬೇಡಿಕೆಗೆ ತಕ್ಕಷ್ಟು ಲಸಿಕೆ ಒದಗಿಸುವ ನಿರೀಕ್ಷೆ ಇದೆ ಎಂದು ಸಿಎಂ ತಿಳಿಸಿದರು.

ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ಹಾಕಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಅಭಿಯಾನಕ್ಕಾಗಿ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗ ಪಡೆಯುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಸೂಕ್ತ ಸಂಖ್ಯೆಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ಮುಂಚಿತವಾಗಿಯೇ ಲಸಿಕೆ ದಾಸ್ತಾನು ಪಡೆದು, ಲಸಿಕಾ ಕೇಂದ್ರಗಳಿಗೆ ತಲುಪಿಸಿ, ವಿಶೇಷ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಮುಖ್ಯಮಂತ್ರಿಯವರು ಈ ಬೃಹತ್ ಲಸಿಕೆ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ಕೊರೊನಾ ಲಸಿಕೆ ಪ್ರಮಾಣ ಹೆಚ್ಚಾಗಿರುವುದರಿಂದ ಈಗ ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸರಾಸರಿ ಶೇ. 71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ, ಈ ಸಂದರ್ಭದಲ್ಲಿ ರಾಜ್ಯದ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ಇತರ ಜಿಲ್ಲೆಗಳಲ್ಲಿಯೂ ರಾಜ್ಯದ ಸರಾಸರಿ ಪ್ರಮಾಣದ ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಭಿವೃದ್ಧಿ ಆಯುಕ್ತೆ ಮತ್ತು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌