ವಿಜಯಪುರವನ್ನು ರಫ್ತು ನಗರ ಮಾಡುವ ಗುರಿಯಿದೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರವನ್ನು ರಫ್ತು ನಗರವನ್ನಾಗಿಸುವ ಗುರಿ ಹೊಂದಲಾಗಿದೆ. ಇಲ್ಲಿನ ಉದ್ದಿಮೆಗಳು ಕೂಡ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಹೇಳಿದರು.

ವಿಜಯಪುರ ನಗರದ ಶಿಕಾರಖಾನೆ ಬಳಿಯ ಜಿಲ್ಲಾ ಕೈಗಾರಿಕೆ ಕೇಂದ್ರದ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರಸ ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಆಶ್ರಯದಲ್ಲಿ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಲಾಗಿದ್ದ ವಾಣಿಜ್ಯ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಪಕ್ಕದ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ ಸೇರಿದಂತೆ ಗಡಿ ಭಾಗದ ಮಹಾರಾಷ್ಟ್ರದ ಸೋಲಾಪುರ ಕೂಡ ರಫ್ತು ಮಾಡುವಲ್ಲಿ ವಿಜಯಪುರಕ್ಕಿಂತಲೂ ಮುಂದಿವೆ. ಆದರೆ ನಮ್ಮ ಜಿಲ್ಲೆಯಲ್ಲಿ ಮಾತ್ರ ಈ ಕಾರ್ಯ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ ಎಂದು ಹೇಳಿದರು.

ಸದ್ಯಕ್ಕೆ ಒಣ ದ್ರಾಕ್ಷಿ, ದಾಳಿಂಬೆ, ಲಿಂಬೆ ಸೇರಿದಂತೆ ವಾಣಿಜ್ಯ ಬೆಳೆಗಳ ಉತ್ಪನ್ನಗಳನ್ನು ಮಾತ್ರ ರಫ್ತು ಮಾಡಲಾಗುತ್ತಿದ್ದು, ಕೈಗಾರಿಕೆಯ ವಸ್ತುಗಳು ಕೂಡ ರಫ್ತು ಮಾಡುವ ನಿಟ್ಟಿನಲ್ಲಿ ಕೈಗಾರಿಕೋದ್ಯಮಿಗಳು ಉತ್ತಮ ಗುಣಮಟ್ಟದ ವಸ್ತುಗಳನ್ನು ಉತ್ಪಾದಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ವಿಜಯಪುರ ಜಿಲ್ಲೆಯ ಮುಳವಾಡ ಮತ್ತು ಸಿಂದಗಿಯಲ್ಲಿ ಕೈಗಾರಿಕೆ ಪ್ರದೇಶಗಳನ್ನು ಅಭಿವೃದ್ಧಿ ಪಡೆಸಲಾಗುತ್ತಿದೆ. ಜಿಲ್ಲೆಯ ನವ ಉದ್ಯಮೆದಾರರಿಗೆ ಇಲ್ಲಿನ ಕೈಗಾರಿಕೆ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಿ ಉದ್ಯೋಗ ಸೃಷ್ಠಿಯಾದರೆ ಜಿಲ್ಲೆಯ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಮೃತ ಯೋಜನೆ ಅಂಗವಾಗಿ ಜಿಲ್ಲೆಯಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿ ಬಸವರಾಜ ಬಿರಾದಾರ ಕೈಗಾರಿಕೆಗಳ ನಿವೇಶನ ಹಂಚಿಕೆ ಹಾಗೂ ಕೈಗಾರಿಕೆ ಬೆಳವಣಿಗೆಯ ನಿಟ್ಟಿನಲ್ಲಿ ಪೂರಕವಾಗಿ ಶ್ರಮಿಸುತ್ತಿದ್ದಾರೆ ಎಂದು ಪಿ. ಸುನೀಲ ಕುಮಾರ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ರಫ್ತು ಮಾಡುವ ಗುಣಮಟ್ಟದ ವಸ್ತುಗಳು ಹೆಚ್ಚಿದ್ದು, ಇನ್ನಷ್ಟು ಬೆಳವಣಿಗೆ ಆಗಬೇಕು. ಕೈಗಾರಿಕೆ ಸ್ಥಾಪನೆಗಳಿಗೆ ಸರಕಾರ ಸರಳಿಕೃತ ನೀತಿ ಜಾರಿಗೆ ತಂದಿದ್ದು, ಈ ಹಿಂದಿನ ಅಡೆತಡೆಗಳನ್ನು ತಗೆದು ಹಾಕಿದೆ. ಹೀಗಾಗಿ ಇಂದು ಕೈಗಾರಿಕೆ ಸ್ಥಾಪನೆಗೆ ಉತ್ತಮ ಅವಕಾಶಗಳು ಇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಉದ್ಯಮ, ಚೇಂಬರ್ ಆಫ್ ಕಾಮರ್ಸ್ ಇಂಡಿಸ್ಟ್ರೀ, ಅಗ್ರಿಕಲ್ಚರ್ ಅಧ್ಯಕ್ಷ ಡಿ.ಎಸ್. ಗುಡ್ಡೋಡಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಣ್ಣ ಉದ್ಯಮಿದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ರಾಜಶೇಖರ ವಿಲಿಯಮ್ಸ್, ತಮಣ್ಣ ಈಳಗೇರ, ಟಿ. ಸಿ. ವಿಜಯ ಬಾಸ್ಕರ, ಸಿಡಾಕ್ ಜಂಟಿ ನಿರ್ದೇಶಕಿ ಎಸ್. ಬಿ. ಬಳ್ಳಾರಿ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌