ಬಿ ಎಸ್ ವೈ ಹಾಕಿಕೊಟ್ಟ ಮಾರ್ಗದರ್ಶನಲ್ಲಿ ಸಿಎಂ 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರಲು ಸ್ವಚ್ಛ ಆಡಳಿತ ನೀಡುತ್ತಿದ್ದಾರೆ- ಸಚಿವ ಹಾಲಪ್ಪ ಆಚಾರ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನದಡಿ ಸಿಎಂ ಬಸವರಾಜ ಬೊಮ್ಮಾಯಿ ಸ್ವಚ್ಛ ಆಡಳಿತ ನೀಡುವ ಮೂಲಕ 2023ರಲ್ಲಿ ಮತ್ತೋಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಿಂದಗಿಗೆ ಬಂದು ಪ್ರಚಾರ ಮಾಡಲಿದ್ದಾರೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ತಕ್ಷಣ ರಾಜ್ಯಕ್ಕೆ ಅಭೂತಪೂರ್ವ ಕೊಡುಗೆ ಕೊಟ್ಟಿದ್ದಾರೆ. ರೈತರ ಮಕ್ಕಳಿಗೆ ವಿಶೇಷವಾಗಿ ಆರ್ಥಿಕ ನೆರವು ನೀಡುವ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ರೈತರ ಮಕ್ಕಳಿಗೆ ಇಲ್ಲಿಯವರೆಗೆ ಕೂಡ ವಿಶೇಷವಾದ ಒಂದು ಸವಲತ್ತು, ಆರ್ಥಿಕ ನೆರವು ಸಿಕ್ಕಿರಲಿಲ್ಲ. ಕೆಲವರಿಗೆ ಮಾತ್ರ ಸೀಮಿತವಾಗಿದ್ದ ಆರ್ಥಿಕ ನೆರವನ್ನು ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಉತ್ತಮ ಯೋಜನೆ ಜಾರಿ ಮಾಡಿದ್ದಾರೆ ಎಂದು ಹಾಲಪ್ಪ ಆಚಾರ ತಿಳಿಸಿದರು.

ಸಿಎಂ ಅಲ್ಲದೆ 7500 ಸ್ವಸಹಾಯ ಸಂಘಗಳಿಗೆ ಒಂದು ಲಕ್ಷ ರೂಪಾಯಿವರೆಗೆ ಧನಸಹಾಯ ನೀಡಿ ಸಣ್ಣಕೈಗಾರಿಕೆಗಳಿಗೆ ದೊಡ್ಡ ಪ್ರೋತ್ಸಾಹ ನೀಡಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಸುಧಾರಣೆಗಾಗಿ ಮೂಲಭೂತ ಸೌಕರ್ಯ ಒದಗಿಸಲು ಪ್ರತಿಯೊಂದು ಜಿಲ್ಲೆಗಳ ಆಯ್ದ ಅಂಗನವಾಡಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವೃದ್ಧಾಪ್ಯ ವೇತನವನ್ನು ರೂ. 1000 ದಿಂದ ರೂ. 1200 ಗಳಿಗೆ ಹೆಚ್ಚಿಗೆ ಮಾಡಿದ್ದಾರೆ. ಇದು ಎಲ್ಲರಿಗೂ ನೆರವಾಗಲಿದೆ ಎಂದು ಅವರು ತಿಳಿಸಿದರು.

ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಸಿಎಂ ಉತ್ತಮ ಆಡಳಿತ ನೀಡುತ್ತಿದ್ದಾರೆ

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಚ್ಛ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಹಾರಿಗೊಳಿಸುವ ಮೂಲಕ ನೀಡುವ ಮೂಲಕ 2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಸಚಿವರು ತಿಳಿಸಿದರು.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲುವು

ಸಿಂದಗಿ ಬೈ ಎಲೆಕ್ಷನ್ ನಲ್ಲಿ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಈಗಾಗಲೇ ಎರಡು ಬಾರಿ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅಲ್ಲದೇ, ಅವರ ಸೇವೆಯನ್ನು ಮತದಾರರು ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಪ್ರಚಾರ ಸಂದರ್ಭದಲ್ಲಿ ಜನಸ್ಪಂದನೆ ನೋಡಿದರೆ ಶೇಕಡ ನೂರರಷ್ಟು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿಯಾಗಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಮೇಶ ಭೂಸನೂರ ಎರಡು ಬಾರಿ ಶಾಸಕರಾಗಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದರು. ಅವರು ಮೂರನೆಯ ಬಾರಿ ಆಯ್ಕೆಯಾಗಬೇಕಿತ್ತು. ಆದರೆ ಅನುಕಂಪದ ಹಿನ್ನೆಲೆಯಲ್ಲಿ ಆ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಅಭ್ಯರ್ಥಿ ಎಂ. ಸಿ. ಮನಗೂಳಿ ಅವರನ್ನು ಆಯ್ಕೆ ಮಾಡಿದರು. ಎಂಸಿ ಮನಗೂಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ನಮ್ಮ ದೇಶದಲ್ಲಿ ಅನುಕಂಪ ಎಂಬುದು ಬಹಳ ಪರಿಣಾಮಕಾರಿಯಾಗಿ ಪ್ರಭಾವ ಬೀರುತ್ತದೆ. ನಮ್ಮ ಸಂಸ್ಕೃತಿಯಂತೆ ವಯಸ್ಸಾದವರು ಮತ್ತು ಕಷ್ಟದಲ್ಲಿರುವವರಿಗೆ ಜನ ಅನುಕಂಪ ತೋರಿಸುತ್ತಾರೆ. ಹೀಗಾಗಿ ಕಳೆದ ಬಾರಿ ಭಾವನಾತ್ಮಕವಾಗಿ ಈ ವಿಚಾರ ಅದು ಕೆಲಸ ಮಾಡಿದೆ. ಆದರೆ, ಈ ಬಾರಿ ವಾತಾವರಣ ಬದಲಾಗಿದೆ. ಈಗ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೀಳಿ‌ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಬಗ್ಗೆ ದೇಶದಲ್ಲಿ ಎಲ್ಲರಿಗೂ ಈಗ ಗೊತ್ತಿದೆ. ‌ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಲ್ಲಿರುವ ಭಿನ್ನಾಭಿಪ್ರಾಯಗಳು ಬೀದಿಗೆ ಬಂದಿವೆ. ಹೀಗಾಗಿ ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಚಿವರ ವಿಶ್ವಾಸ ವ್ಯಕ್ತಿಡಿಸಿದರು.

ವಿಜಯಪುರ, ಕಲಬುರ್ಗಿಯಲ್ಲಿ ಭೂಕಂಪ ವಿಚಾರ ಭೂಕಂಪ ವಿಚಾರ

ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪದೇ ಪದೇ ಭೂಕಂಪ ಉಂಟಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಹಾಲಪ್ಪ ಆಚಾರ, ಈಗಾಗಲೇ ಹೈದರಾಬಾದಿನ ತಜ್ಞರ ತಂಡ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗುಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಅಲ್ಲದೇ ಹೈದರಾಬಾದ ಮತ್ತು ರಾಜ್ಯದ ನೈಸರ್ಗಿಕ ವಿಕೋಪ ಉಸ್ತುವಾರಿ ನಿರ್ವಹಣೆ ಕೇಂದ್ರದ ಅಧಿಕಾರಿಗಳ ತಂಡ ಜಂಟಿಯಾಗಿ ಈ ಬಗ್ಗೆ ಅಧ್ಯಯನ ನಡೆಸುತ್ತಿದೆ. ಅಲ್ಲದೇ, ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಭಾರತ ಭೂಕಂಪದ 2ನೇ ವಲಯದಲ್ಲಿ ಬರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

ಅಪ್ರಾಪ್ತ ಬಾಲಕಿಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ 10 ದಿನಗಳಲ್ಲಿ ನಾಲ್ಕು ಜನ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯ. ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇವೆ. ಕೆಲವು ಕಿಡಿಗೇಡಿಗಳು ಕೃತ್ಯ ಎಸಗುವ ಮೂಲಕ ಸಮಾಜದ ಸ್ವಾಸ್ತ್ಯವನ್ನು ಕೆಡಿಸುತ್ತಿದ್ದಾರೆ. ಇಂಥ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ದುಷ್ಠರು ಮಾಡುವ ಕೆಲಸಕ್ಕೆ ಒಂದು ಪಕ್ಷವನ್ನು ಜವಾಬ್ದಾರಿ ಮಾಡಲು ಸಾಧ್ಯವಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಹಾಲಪ್ಪ ಆಚಾರ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಶಾಸಕರಾದ ಎ. ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌