Cold Storage CM: ವಿಜಯಪುರ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ತೊರವಿ ಗ್ರಾಮದ ಬಳಿ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ವಿವಿಧ ಸೌಲಭ್ಯ ಒದಗಿಸುವ ಕುರಿತು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಚರ್ಚಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ, ಜನಪ್ರತಿನಿಧಿಗಳ ಸಭೆ ನಡೆಸಿದರು

ವಿಜಯಪುರ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಒಂದು ಲಕ್ಷ ಟನ್ ದ್ರಾಕ್ಷಿ ಉತ್ಪಾದನೆಯಾಗುತ್ತಿದ್ದು, ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಅಗತ್ಯ ಎಂದು ದ್ರಾಕ್ಷಿ ಬೆಳೆಗಾರರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಮಂಡಳಿಯ ಹೆಸರಿನಲ್ಲಿ ವೈನ್ ಪಾರ್ಕಿನಲ್ಲಿ ಒಟ್ಟು 141.28 ಎಕರೆ ಜಮೀನು ಲಭ್ಯವಿದ್ದು, ಇದರಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಿಸಲು ಆರು ಎಕರೆ ಜಮೀನು ಗುರುತಿಸಲಾಗಿದೆ. ಅಲ್ಲದೇ, ದ್ರಾಕ್ಷಿ ಬೆಳೆಗಾರರ ಸಂಘಗಳ ಮೂಲಕವೂ ಕೋಲ್ಡ್ ಸ್ಟೋರೇಜ್ ನಿರ್ಮಿಸಲು ಹಾಗೂ ಈ ಸಂಘಗಳಿಗೆ ಎನ್ ಎಚ್ ಎಂ ಅಡಿ ಸಹಾಯಧನ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು.

ಹಸಿ ದ್ರಾಕ್ಷಿಗೆ ಮಾರುಕಟ್ಟೆ ಸೌಲಭ್ಯ ವಿಸ್ತರಿಸಲು ರೆಫ್ರಿಜರೇಟರ್ ಕಂಟೇನರ್ ಇರುವ ರೈಲು ಸೇವೆ ಒದಗಿಸಲು ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ ಅವರು, ಒಣದ್ರಾಕ್ಷಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಹಾಗೂ ರಫ್ತು ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು.  ಬ್ರಾಂಡಿಂಗ್, ಪ್ಯಾಕೇಜಿಂಗ್ ಮೊದಲಾದ ವಿಷಯಗಳಲ್ಲಿ ಬೆಂಬಲ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಇದರೊಂದಿಗೆ ವೈನ್ ತಯಾರಿಕೆಗೆ ಹಾಗೂ ಮಾರಾಟಕ್ಕೆ ಉತ್ತೇಜನ ನೀಡಲು ಹಾಗೂ ರಫ್ತು ಅವಕಾಶ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು.  ವೈನ್ ಪಾರ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕೆರೆಯಲ್ಲಿ ಬೋಟಿಂಗ್ ಮತ್ತಿತರ ಮನರಂಜನೆ ಹಾಗೂ ರೆಸಾರ್ಟ್ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸಿಎಂ ಸೂಚನೆ ನೀಡಿದ ಬಸವರಾಜ ಬೊಮ್ಮಾಯಿ, ನೂತನವಾಗಿ ನಿರ್ಮಾಣವಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣದಲ್ಲಿ ಕಾರ್ಗೊ ವಿಮಾನ ಸೇವೆ ಒದಗಿಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆನಂದ್ ಸಿಂಗ್, ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಕೇವಲ್ ಚಂದ್ ಬನ್ಸಾಲಿ, ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ತೋಟಗಾರಿಕಾ ಇಲಾಖೆಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

ಹೊಸ ಪೋಸ್ಟ್‌