Airport Kajalol: ವಿಜಯಪುರ ಏರಪೋರ್ಟ್ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಗೋವಿಂದ ಕಾರಜೋಳ- ನಂತರ ಹೇಳಿದ್ದೇನು ಗೊತ್ತಾ?

ವಿಜಯಪುರ: ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬುರಣಾಪುರ ಬಳಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದರು. 

ಕಾಮಗಾರಿಯ ಪ್ರಗತಿಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜು. 31ರವರೆಗೆ ಮೊದಲನೇ ಹಂತದ ಕಾಮಗಾರಿಯ ಶೇ.64 ಭೌತಿಕ ಮತ್ತು 63.17 ಆರ್ಥಿಕ ಪ್ರಗತಿ ಸಾಧಿಸಲಾಗಿದೆ.   ಎರಡನೇ ಹಂತದ ಕಾಮಗಾರಿಯಲ್ಲಿ ಶೇ.10.34ರಷ್ಟು ಭಔತಿಕ ಮತ್ತು ಶೇ.4.26ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ  ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬುರಣಾಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದರು

ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72ದಿಂದ ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ರನ್ ವೇ, ಟ್ಯಾಕ್ಸಿ ವೇ, ಎಪ್ರಾನ್, ಇಸೋಲೇಶನ್ ಬೇ ಹಾಗೂ ಇತರೆ ಕಾಮಗಾರಿಗಳ ವಿನ್ಯಾಸದಲ್ಲಿ ವ್ಯತ್ಯಾಸವಾಗುತ್ತಿರುವುದರಿಂದ ಮೂರನೇ ಹಂತದ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಅವಶ್ಯವಿರುವ 120 ಕೋಟಿ ರೂ.ಗಳಿಗೆ ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಚಿವ ಗೋವಿಂದ ಕಾರಜೋಳ ಮಾಹಿತಿ 

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ವಿಮಾನ ನಿಲ್ದಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ರನ್ ವೇ, ಟ್ಯಾಕ್ಸಿ ವೇ, ಎಪ್ರಾನ್, ಇಸೋಲೇಶನ್ ಬೇ, ಕೂಡು ರಸ್ತೆ, ಒಳ ರಸ್ತೆಗಳು, ಪೆರಿಫೆರಲ್ ರಸ್ತೆಗಳು ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿ.ಎಫ್.ಆರ್. ಕಟ್ಟಡ, ಸುತ್ತಲು ಕಂಪೌಂಡ್ ಗೋಡೆ ಹಾಗೂ ಇತರೆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಸಿವಿಲ್ ಉಪಕಾಮಗಾರಿಯಲ್ಲಿ ವಿಮಾನ ನಿಲ್ದಾಣದ ಆವರಣದಲ್ಲಿರುವ ವಿದ್ಯುತ್ ಮಾರ್ಗಗಳ ಸ್ಥಳಾಂತರ, ವಿಮಾನ ನಿಲ್ದಾಣಕ್ಕೆ 24/7 ನೀರು ಸರಬರಾಜು, ವಿಮಾನ ನಿಲ್ದಾಣಕ್ಕೆ 2000 ಕಿಲೋ ವ್ಯಾಟ್ ನಿರಂತರ ವಿದ್ಯುತ್ ಸರಬರಾಜು ಹಾಗೂ ಇತರೆ ಕಾಮಗಾರಿಗಳನ್ನು ಸಹ ಬೇಗನೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ನಡೆಸಬೇಕಾದ ಪ್ರಕ್ರಿಯೆಗಳನ್ನು ತೀವ್ರಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಈ ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ಡಿಪಿಆರ್ ತಯಾರಿಸುವ, ಮತ್ತು ಅದಕ್ಕೆ ಸರ್ಕಾರದಿಂದ ಬೇಗನೇ ಅನುಮೋದನೆ ಪಡೆದು ಕಾಮಗಾರಿಯನ್ನು ಪ್ರಾರಂಭಿಸುವ ಪ್ರಕ್ರಿಯೆಯನ್ನು ಸಹ ಕಾಲಮಿತಿಯೊಳಗೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಒಂದೂವರೆ ತಿಂಗಳ ಬಳಿಕ ಮತ್ತೆ ಭೇಟಿ

ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸಲಾಗುತ್ತಿದೆ. ಕೆಲಸ ಮಾಡುವ ತಂಡಗಳನ್ನು ಹೆಚ್ಚಿಸಿ ಹೆಚ್ಚಿನ ಪ್ರಗತಿಯನ್ನು ತೋರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಸರಕಾರದ ಮಟ್ಟದಲ್ಲಿ ಏನಾದರು ಅಡೆತಡೆ ಇದ್ದರೆ ಅದನ್ನು ಸರಿಪಡಿಸಿಕೊಡುವುದಾಗಿ ತಿಳಿಸಲಾಗಿದೆ.  ಸುಮಾರು ರೂ. 340 ಕೋ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯ ಪ್ರಗತಿಯನ್ನು ನಿರಂತರ ಪರಿಶೀಲಿಸಲಾಗುತ್ತಿದೆ.  ಒಂದೂವರೆ ತಿಂಗಳ ಬಳಿಕ ಮತ್ತೆ ತಾವು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಗೋವಿಂದ ಕಾರಜೋಳ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ನವೀನ್ ಆರ್.ಕೆ., ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಸಿ. ಬಿ. ಚಿಕ್ಕಲಗಿ, ಎಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಕೆ. ಮುಜುಂದಾರ, ನೀರಾವರಿ ಇಲಾಖೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ರಾಠೋಡ, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿ. ಆರ್. ಹಿರೇಗೌಡ, ವಿಮಾನ ನಿಲ್ದಾಣ ಗುತ್ತಿಗೆದಾರ ಎಸ್. ಎಸ್. ಆಲೂರ ಮತ್ತಿತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌