Police Martyrs Day: ನಮ್ಮ ಒಳಿತಿಗಾಗಿ ಪ್ರಾಣ ಮುಡುಪಾಗಿಟ್ಟವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯ- ಡಾ. ದಾನಮ್ಮನವರ

ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಸಿಬ್ಬಂದಿ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬ.‌ ದಾನಮ್ಮನವರ ಹೇಳಿದರು.

ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಸಹ ಕಾನೂನು ಪಾಲಿಸುವ ಮೂಲಕ ಪೊಲೀಸರ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ವಿಜಯಪುರ ಜಿಲ್ಲೆಯ ಪೊಲೀಸರು ಹಲವಾರು ಪ್ರಮುಖ ಪ್ರಕರಣಗಳನ್ನು ಬೇಧಿಸಿ, ಸಾರ್ವಜನಿಕರಿಗೆ ಅದರಲ್ಲೂ ರೈತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆಯಿಂದ ಮೆಚ್ಚುಗೆ ಪಡೆದಿದ್ದಾರೆ. ಸಮಾಜದಲ್ಲಿ ಸಂಘರ್ಷವಾದಾಗ ಮೊದಲಿಗೆ ನೆನಪಿಗೆ ಬರುವುದೇ ಪೊಲೀಸರು. ಜನರ ಸಂದಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ. ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತ ಹುತಾತ್ಮರಾದ ಪೊಲೀಸರ ಸ್ಮರಣೆ ಎಂದು‌ ಜಿಲ್ಲಾಧಿಕಾರಿ ಸ್ಮರಿಸಿದರು.

ವಿಜಯಪುರದಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು

ದೇಶದಲ್ಲಿ ಕಳೆದು ಒಂದು ವರ್ಷದಲ್ಲಿ 264 ಜನ ಪೊಲೀಸರು ಹುತಾತ್ಮರಾಗಿದ್ದು, ನಮ್ಮ ರಾಜ್ಯದ 11 ಜನ ಪೊಲೀಸರು ಹುತಾತ್ಮರಾಗಿದ್ದಾರೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬ ಹರಿದಿನಗಳಲ್ಲಿ ಅಹಿತಕರ ಘಟನೆ ಘಟಿಸದಂತೆ ಕಾನೂನು ಮತ್ತು ಸುವ್ಯವಸ್ಥೆ ಜೊತೆಗೆ ಅಪರಾಧಗಳ ತಡೆಗಟ್ಟುವುದು ಮತ್ತು ಅಪರಾಧಗಳನ್ನು ಪತ್ತೆ ಹಚ್ಚುವ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ಆಸ್ತಿ-ಪಾಸ್ತಿ ಜೀವನ ರಕ್ಷಣೆಗೆ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.

ವಿಜಯಪುರ ಜಿಲ್ಲೆಯು ಗಡಿ ಭಾಗದ ಜಿಲ್ಲೆಯಾಗಿದೆ. ಜಿಲ್ಲೆಯ ಓರ್ವ ಪಿಎಸ್‍ಐ ಇಬ್ಬರು ಪೊಲೀಸ್ ಪೇದೆ ಕೋವಿಡ್ ಕಾರ್ಯ ನಿರ್ವಹಣೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಅವರು ಹೇಳಿದರು.

2019 ಹಾಗೂ 2020ರಲ್ಲಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ನದಿಯ ನೆರೆ ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ಪೊಲೀಸ್ ಇಲಾಖೆ ತೊಡಗಿಸಿಕೊಂಡು ಜನ ಜಾನುವಾರಗಳ ರಕ್ಷಣೆ ಹೊಣೆ ಹೊತ್ತು ಕಾರ್ಯ ನಿರ್ವಹಿಸಿ, ಇಲಾಖೆಯು ಸಾರ್ವಜನಿಕರಿಗೆ ಅಚ್ಚುಮೆಚ್ಚಿನ ಇಲಾಖೆಯಾಗಿದೆ. ಶಿಸ್ತು, ಸಮಯ ಪ್ರಜ್ಞೆ, ಪ್ರಾಮಾಣಿಕತನ ಇವೆಲ್ಲವೂ ಕರ್ನಾಟಕ ಪೊಲೀಸಿನ ವಿಶೇಷ ಗೌರವವಿದೆ. ಜಿಲ್ಲೆಯ ಪೊಲೀಸ್ ಇಲಾಖೆ ತನ್ನ ಕಾರ್ಯವೈಖರಿಯಿಂದ ಮೆಚ್ಚುಗೆ ಪಡೆದಿದೆ. ಯಶಸ್ವಿ ಪೊಲೀಸ್ ಕಾರ್ಯ ವೈಖರಿಯಿಂದ ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ನೆಲೆಸಿದೆ. ತಮ್ಮ ಜೀವದ ಹಂಗು ಲೆಕ್ಕಿಸದೇ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಸ್ಥಾಪಿಸಿದಂತಹÀ ಪೊಲೀಸರ ತ್ಯಾಗ ಮತ್ತು ಬಲಿದಾನ ಮಾಡಿದ ಪೊಲೀಸ ಹುತಾತ್ಮರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

ಪೋಲಿಸ್ ಇಲಾಖೆಯ ಶ್ರೆಯೋಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾಬ ಮಾಡುವ ಮೂಲಕ ಪೊಲೀಸರ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಜಿಲ್ಲೆಯಲ್ಲಿ 72 ಪೊಲೀಸ್ ವಸತಿ ಗೃಹ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪೊಲೀಸ್ ಇಲಾಖೆಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ‌ ಮಹಾನಗರ ಪಾಲಿಕೆ ವತಿಯಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ -ಸಿಸಿಟಿವಿ ಅಳವಡಿಸುವಂಥ ಕಾಮಗಾರಿ ಆರಂಭಗೊಂಡಿದ್ದು, ಕೆಲವೇ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಂದು ಹೇಳಿದರು.

ಜಿ. ಪಂ. ಮುಖ್ಯ ಕಾರ್ಯ‌ ನಿರ್ವಹಣಾಧಿಕಾರಿ ರಾಹುಲ್ ಸಿಂಧೆ ಅವರು ಮಾತನಾಡಿ, ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಕಾರ್ಯ ಅನನ್ಯವಾಗಿದೆ. ಪೊಲೀಸರ ಯಶಸ್ವಿ ಕಾರ್ಯ ನಿರ್ವಹಣೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದ್ದು, ಈ ಸಂದರ್ಭದಲ್ಲಿ ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಎಸ್ಪಿ ಎಚ್. ಡಿ. ಆನಂದ್ ಕುಮಾರ ಮಾತನಾಡಿ, 1959ರ ಚೀನಾ ವಿರುದ್ಧದ ಯುದ್ಧದಲ್ಲಿ ವೀರಮರಣ ಹೊಂದಿದ ಧೀರೋದಾತ್ತ ಯೋಧರ ಸ್ಮರಣಾರ್ಥ ಪ್ರತಿ ವರ್ಷ ಅ. 21ರಂದು ಪೊಲೀಸ್ ಹುತಾತ್ಮರ ದಿನ ಎಂದು ಆಚರಿಸಲಾಗುತ್ತಿದೆ. ಪೊಲೀಸರು ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ರಕ್ಷಣೆ ಸಂದರ್ಭದಲ್ಲಿ ಕಾರ್ಯ ನಿರ್ವಹಣೆಯಲ್ಲಿ ಹೋರಾಡಿ ಸಮರ್ಪಿತ ಪೊಲೀಸ್ ಸಿಬ್ಬಂದಿಯವರಿಗೆ ಗೌರವ ಸಲ್ಲಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಹಿಸಲಾಗಿದ್ದ ಪೊಲೀಸ ಹುತಾತ್ಮರ ದಿನಾಚರಣೆ ಅಂಗವಾಗಿ ಎಎಸ್ಪಿ ಡಾ. ರಾಮ ಲಕ್ಷ್ಮಣಸಾ ಅರಸಿದ್ಧಿ, ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ, ಸೈನಿಕ ಶಾಲೆಯ ಪ್ರಾಚಾರ್ಯ ಸೇರಿದಂತೆ ಪೊಲೀಸ್ ಇಲಾಖೆಯ ನಾನಾ ಅಧಿಕಾರಿಗಳು,ಸಿಬ್ಬಂದಿ, ಹುತಾತ್ಮ ಪೊಲೀಸರ ಕುಟುಂಬಸ್ಥರು ಹಾಗೂ ಪತ್ರಕರ್ತರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀರಿಗೆ ಗೌರವ ನಮನ ಅರ್ಪಿಸಿದರು. ಪೋಲಿಸ್ ಬ್ಯಾಂಡ್ ಮೂಲಕ ಗೀತೆ ಹಾಗೂ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

Leave a Reply

ಹೊಸ ಪೋಸ್ಟ್‌