ಬಸವನಾಡಿನಲ್ಲಿ ಫೆ. 4, 5 ರಂದು ಪತ್ರಕರ್ತರ ರಾಜ್ಯಮಟ್ಟಡ ಸಮ್ಮೇಳನ- ಸಿಎಂ ಮೌಖಿಕವಾಗಿ ಒಪ್ಪಿಗೆ- ಶಿವಾನಂದ ತಗಡೂರು

ಬೆಂಗಳೂರು: ಜ. 9 ಮತ್ತು 10 ರಂದು ಬಸವನಾಡು ವಿಜಯಪುರದಲ್ಲಿ ನಡೆಯಬೇಕಿದ್ದ ಕಾರ್ಯನಿರತ ಪತ್ರಕರ್ತರ 37ನೇ ಸಮ್ಮೇಳನವನ್ನು ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.  ಈಗ ಈ ಸಮ್ಮೇಳನವನ್ನು ಫೆ. 4 ಮತ್ತು 5 ರಂದು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ.  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಪದಾಧಿಕಾರಿಗಳು ವಿಧಾನ ಸೌಧದಲ್ಲಿ ಸಮ್ಮೇಳನಕ್ಕೆ ಅಧಿಕೃತ ಆಮಂತ್ರಣ ನೀಡಿದ ವೇಳೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾನಿಪ ಸಮ್ಮೇಳನಕ್ಕೆ ಆಹ್ವಾನ ನೀಡಿದ ವಿಜಯಪುರ ಪತ್ರಕರ್ತರು

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ನಮ್ಮೊಡನೆ ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು.  ಜ. 9 ಮತ್ತು 10 ರಂದು ನಡೆಯಬೇಕಿದ್ದ ಈ ಸಮ್ಮೇಳನವನ್ನು ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಿದ್ದನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ ಅವರು, ಬರುವ ಫೆ. 4 ಮತ್ತು 5 ರಂದು ಸಮ್ಮೇಳನ ದಿನಾಂಕ ನಿಗದಿಪಡಿಸಿ, ಸಮ್ಮೇಳನ ಉದ್ಘಾಟನೆಗೆ ಆಗಮಿಸುವುದಾಗಿ ಭರವಸೆ ನೀಡಿದರು.

ಸಮ್ಮೇಳನಗಳನ್ನು ಯಶಸ್ವಿಗೊಳಿಸುವುದೆಂದರೆ ವಿಜಯಪುರ ಜನತೆಗೆ ಎಲ್ಲಿಲ್ಲದ ಹಿಗ್ಗು.  ಹೀಗಾಗಿ ವಿಜಯಪುರದಲ್ಲಿ ನಡೆಯಲಿರುವ ಸಮ್ಮೇಳನ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾನಿಪ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಸಮಿತಿ ಸದಸ್ಯ ಡಿ. ಬಿ. ವಡವಡಗಿ, ಸಹ ಖಜಾಂಚಿ ದೀಪಕ ಶಿಂತ್ರೆ ಹಾಗೂ ಹಿರಿಯ ಪತ್ರಕರ್ತ ಅಲ್ಲಮಪ್ರಭು ಜಿ. ಮಲ್ಲಿಕಾರ್ಜುನಮಠ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌