ಸಿಂದಗಿ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ‌ ಸೋಮಜಾಳ ನಿಧನ- ಎಚ್ಡಿಕೆ ಸಂತಾಪ- ಮುದ್ದೇಬಿಹಾಳ ಕಾರ್ಯಕ್ರಮ ನಾಳೆಗೆ ಮುಂದೂಡಿಕೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡ ಸಂದರ್ಭದಲ್ಲಿಯೇ ಪಕ್ಷಕ್ಕೆ ಆಘಾತ ಎದುರಾಗಿದೆ.

ಸಿಂದಗಿ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ(54) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಸಿಎಂ‌ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಅವರು ಪಾಲ್ಗೊಂಡಿದ್ದರು. ಅಲ್ಲದೇ, ನಂತರ ನಾಗಠಾಣ ಮತಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಶಿವಾನಂದ ಪಾಟೀಲ ಸೋಮಜಾಳ ಭಾಗಿಯಾಗಿದ್ದರು.

ಸಂಜೆ ಸಿಂದಗಿ ಪಟ್ಟಣಕ್ಕೆ ಅವರು ಮರಳಿದ್ದರು. ರಾತ್ರಿ 9 ರ ಸುಮಾರಿಗೆ ಸಂಬಂಧಿಕರ ಮನೆಗೆ ತೆರಳಿದ್ದಾಗ ಕುಡಿಯಲು ನೀರು ಕೇಳಿದ್ದಾರೆ. ಬಳಿಕ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಆದರೆ, ಅವರನ್ನು ಪರೀಕ್ಷಿದ ವೈದ್ಯರು ಶಿವಾನಂದ ಪಾಟೀಲ ಸೋಮಜಾಳ ಅವರು ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ದೃಢಪಡಿಸಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದವರಾದ ಅವರು, 16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಸೇನೆಯಿಮದ ನಿವೃತ್ತರಾದ ಬಳಿಕ ಶಿವಾನಂದ ಪಾಟೀಲ ಸೋಮಜಾಳ ಅವರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು.

ಎಚ್. ಡಿ. ಕುಮಾರಸ್ವಾಮಿ ಸಂತಾಪ

 

ವಿಜಯಪುರ ಸಿಂದಗಿ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮನಾಳ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ಚಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿಂದಗಿ ವಿಧಾಮಸಭೆ ಶ್ರೀ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ.
ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಶ್ರೀ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ಸ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು.

ಶ್ರೀ ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮುದ್ದೇಬಿಹಾಳ ಮತಕ್ಷೇತ್ರದ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನಾಳೆಗೆ ಮುಂದೂಡಿಕೆ

ಈ ಮಧ್ಯೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಳೆಗೆ ಮುಂದೂಡಲಾಗಿದೆ ಎಂದು ಮುದ್ದೇಬಿಹಾಳ ವಿಧಾನಸಭೆ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ. ಸಿ. ಎಸ್. ಸೋಲಾಪೂರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಸಿಂದಗಿ ಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ ಅವರ ಹಠಾತ್ ನಿಧನ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಡಾ. ಸಿ. ಎಸ್. ಸೋಲಾಪೂರ

ಜೆಡಿಎಸ್ ಪಕ್ಷವು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಗೌರವ ಕೊಡುವಂತಹ ಪಕ್ಷವಾಗಿದೆ. ಇಂಥದ್ದರಲ್ಲಿ ಘೋಷಿತ ಅಬ್ಯರ್ಥಿ ಸಾವಿನ ಮೇಲೆ ರಥಯಾತ್ರೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಅವರ ಗೌರವಾರ್ಥ ಇಂದಿನ ರಥಯಾತ್ರೆ ಮುಂದೂಡಬೇಕು ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರು ಸೂಚಿಸಿದ ಹಿನ್ನೆಲೆ ಈ ತೀರ್ಮಾನ ಕೈಕೊಳ್ಳಲಾಗಿದೆ. ಭಾನುವಾರ ರಥಯಾತ್ರೆ ಪೂರ್ವ ನಿಗದಿಯಂತೆ ಬಸರಕೋಡ ಮಾರ್ಗವಾಗಿ ಮುದ್ದೇಬಿಹಾಳ ಪಟ್ಟಣಕ್ಕೆ ಆಗಮಿಸಲಿದೆ. ನಂತರ ಮಿಣಜಗಿ, ತಾಳಿಕೋಟೆ ಮೂಲಕ ಬಳವಾಟಕ್ಕೆ ಆಗಮಿಸಿ ಅಲ್ಲಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಡಾ. ಸಿ. ಎಸ್. ಸೋಲಾಪುರ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌