ವಿಧಾನಸಭೆ ಚುನಾವಣೆ ಕಡ್ಡಾಯವಾಗಿ ಮತದಾನ ಮಾಡಲು ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಕರೆ

ವಿಜಯಪುರ: ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮೇ 10 ರಂದು ನಡೆಯುವ ಮತದಾನದಲ್ಲಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ತಿಕೋಟಾ ತಾ. ಪಂ. ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಅವರು ಕರೆ ನೀಡಿದರು.

ತಿಕೋಟಾ ತಾ. ಪಂ. ಹಾಗೂ ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ತಿಕೋಟಾ ನಗರದಲ್ಲಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾರರು ಯಾವುದೇ ಒತ್ತಡ, ಆಸೆ- ಆಮಿಷಗಳಿಗೆ ಒಳಗಾಗದೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು. ಮತದಾನದ ದಿನದಂದು ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಸರತಿ ಸಾಲಿನಲ್ಲಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಶೌಚಾಲಯ ಹಾಗೂ ಪ್ರಥಮ ಚಿಕಿತ್ಸೆ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಅವರು ಮನವಿ ಮಾಡಿದರು.

ತಿಕೋಟಾ ಪಟ್ಟಣದಲ್ಲಿ ಮತದಾನ ಜಾಗೃತಿ ಅಂಗವಾಗಿ ಗುರುವಾರ ಸಂತೆಯಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು

ಮತದಾನ ಪ್ರಮಾಣ ಶೇ. 100 ರಷ್ಟು ಸಾಧಿಸುವ ನಿಟ್ಟಿನಲ್ಲಿ ವಿದ್ಯುನ್ಮಾನ ಮತಯಂತ್ರದ ಮತದಾನ ಜಾಗೃತಿ ರಥವು ನಗರದ ಪ್ರಮುಖ ಬೀದಿಳಲ್ಲಿ, ಮಾರುಕಟ್ಟೆಯಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು.

ಈ ಸಂದರ್ಭದಲ್ಲಿ ತಾಲೂಕಿನ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಗ್ರಾ. ಪಂ. ಸಿಬ್ಬಂದಿ  ಕಾಲ್ನಡಿಗೆಯ ಮೂಲಕ ಬಸವೇಶ್ವರ ವೃತ್ತದಿಂದ ಗುರುವಾರದ ಮಾರುಕಟ್ಟೆಯಲ್ಲಿ ಸಂಚರಿಸಿ ಮರಳಿ ಬಸವೇಶ್ವರ ವೃತ್ತದವರೆಗೆ ಕಾಲ್ನಡಿಗೆಯ ಮೂಲಕ ಜಾಗೃತಿ ಮೂಡಿಸಿದರು. ಮಾರುಕಟ್ಟೆಯಲ್ಲಿ ಹಾಗೂ ನಗರದ ಬಸವೇಶ್ವರ ವೃತ್ತದ ಬಳಿ ಬೀದಿ ನಾಟಕ ಪ್ರದರ್ಶನ ಹಾಗೂ ಜಾಗೃತಿ ಗೀತೆಗಳನ್ನು ಬಿತ್ತರಿಸುವ ಮೂಲಕ ಮತದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ತಿಕೋಟಾ ತಾ. ಪಂ. ತಾಲೂಕಾ ಯೋಜನಾಧಿಕಾರಿ ಆಯೇಷಾ ಸಾಲೋಟಗಿ ಹಾಗೂ ತಾಲೂಕು ಪಂಚಾಯಿತಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಲ್ಲ ಗ್ರಾ. ಪಂ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌