ಪ್ರಾಣಿಜನ್ಯ ರೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ

ವಿಜಯಪುರ: ಪಶುಸಂಗೋಪನಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪ್ರಾಣಿಜನ್ಯ ರೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿರುವ ನಾಯಿಗಳ ಮಾಹಿತಿ ಸಂಗ್ರಹಿಸಬೇಕು. ಪ್ರಾಣಿಜನ್ಯ ರೋಗಗಳ  ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಪಶುಸಂಗೋಪನಾ ಇಲಾಖೆ ಕೈ ಜೋಡಿಸಿ, ಬೀದಿ ನಾಯಿಗಳಿಗೆ ಚುಚ್ಚುಮದ್ದು ಹಾಕುವುದು, ಜನಸಂದಣಿ ಇರುವ ಸ್ಥಳಗಳಲ್ಲಿ ರೋಗಗಳ ಕುರಿತು ತಿಳುವಳಿಕೆ ಮೂಡಿಸಿ, ರೋಗ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ರೇಬಿಸ್ ಚುಚ್ಚುಮದ್ದಿನ ಔಷಧಿ ಎಂಟಿ ರೆಬೀಸ್ ವ್ಯಾಕ್ಸೀನ್(Anti Rabies Vaccine ARV) ಮತ್ತು  Rabies Immunoglobulin(RIG) ದಾಸ್ತಾನು ಸಂಗ್ರಹಿಸಿ ಇಟ್ಟುಕೊಳ್ಳಬೇಕು.  ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಮೂರು ವ್ಯಾಕ್ಸಿನ್ ವೈಲ್‌ಗಳನ್ನು ಕಡ್ಡಾಯವಾಗಿ ಕಾಯ್ದಿರಿಸಬೇಕು.  ಔಷಧಿಗಳು ಅವಧಿ ಮೀರುತ್ತಿದ್ದರೆ ಒಂದು ತಿಂಗಳು ಮುಂಚಿತವಾಗಿಯೇ ಹೊಸ ದಾಸ್ತಾನು ಪಡೆಯಲು ಕ್ರಮ ಕೈಗೊಳ್ಳಬೇಕು.  ಗ್ರಾಮೀಣ ಪ್ರದೇಶದಲ್ಲಿ ರೇಬಿಸ್ ಕಾಯಿಲೆ ಮತ್ತು ಆ್ಯಂಟಿ ರೇಬಿಸ್ ಔಷಧಿಗಳು, ನಾಯಿ ಕಡಿತದಿಂದ ರೋಗ ಹರಡದಂತೆ ತುರ್ತು ಚಿಕಿತ್ಸೆ ಪಡೆಯುವ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಡಾ. ಗುಂಡಬಾವಡಿ, ಡಾ. ಸಂಪತ ಗುಣಾರಿ, ಡಾ. ಕವಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌