ಗಾಂಧಿ, ಶಾಸ್ತ್ರಿ ದೇಶಕಂಡ ಅಪ್ರತೀಮ ನಾಯಕರು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂಥ ಮಹಾನ್ ವ್ಯಕ್ತಿಗಳ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಅ. 2ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮಕ್ಕೆ ಚರಕದಲ್ಲಿ ನೂಲುವ ಮೂಲಕ ಚಾಲನೆ ನೀಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಯುವಜನತೆ ದೇಶದ‌ ಈ ಮಹಾಪುರುಷರನ್ನು ಮರೆಯದೇ ಅವರ ಆದರ್ಶಮಯ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯವ ಜವಾಬ್ದಾರಿ ಇದೆ. ಮಹಾನ್ ವ್ಯಕ್ತಿಗಳ ಕುರಿತು ಅರಿತುಕೊಂಡು ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಚಿಂತನೆಗಳ ಕುರಿತು ಅಧ್ಯಯನ ಮಾಡಬೇಕು. ಇಂತಹ ಜಯಂತಿ‌ ಮೂಲಕ ಅವರನ್ನು ಸ್ಮರಿಸಿಕೊಳ್ಳುವ ಮೂಲಕ ನಾವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಹೇಳಿದರು.

ವಿಜಯಪುರದಲ್ಲಿ ಮಹಾತ್ಮಾ ಗಾಂಧಿ, ಲಾಲ ಬಹಾದ್ದೂರ ಶಾಸ್ತ್ರಿಯವರ ಜಯಂತಿ ಅಚರಿಸಲಾಯಿತು

ಗಾಂಧೀಜಿಯವರ ದೃಷ್ಟಿಯಲ್ಲಿ ತ್ಯಾಗ ಮತ್ತು ಸೇವಾ ಮನೋಭಾವವೇ ಮಹತ್ವದ್ದಾಗಿತ್ತು. ಸತ್ಯ, ಧರ್ಮ, ನ್ಯಾಯ, ನಿಷ್ಠೆಗಳಿಂದ ಅಸಾಧಾರಣವಾದ ಗುರಿಯನ್ನು ಮುಟ್ಟಲು ಸಾದ್ಯವೆಂದು ಗಾಂಧೀಜಿಯವರು ನಂಬಿದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಅವರು ನೀಡಿದ ಅಮೂಲ್ಯವಾದ ಕೊಡುಗೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ. ಭೂಬಾಲನ ಮಾತನಾಡಿ, ಬ್ರಿಟೀಷ್ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸುವಲ್ಲಿ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದು, ತಮ್ಮ ಬದುಕು, ಸರ್ವಸ್ವವನ್ನೇ ದೇಶಕ್ಕೆ ಅರ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುವ ಮೂಲಕ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಮಾದರಿಯಾದವರು ಮಹಾತ್ಮ ಗಾಂಧೀಜಿಯವರು ಎಂದು ಹೇಳಿದರು.ಸತ್ಯ ಅಹಿಂಸಾ ಮೂಲಕ ಹೋರಾಟ, ಸ್ವಚ್ಛತೆ, ಗ್ರಾಮ ಸ್ವರಾಜ್ಯದ ಕಲ್ಪನೆ‌ ನೀಡಿದ್ದಾರೆ.
ಭಾರತದ ಎರಡನೇ ಪ್ರಧಾನ ಮಂತ್ರಿಯಾದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಭಾರತದ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದರು. ಅವರು ಸಣ್ಣ ವಯಸ್ಸಿಗೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಇವರು ಜೈ ಜವಾನ್ ಜೈಕಿಸಾನ್ ಘೋಷ ವಾಕ್ಯ ನೀಡಿ, ಸೈನಿಕರ ಹಾಗೂ ರೈತರ ಬಗೆಗೆ ಅಪಾರ ಕಳಕಳಿ ಹೊಂದಿದ್ದರು. ಸ್ವತಂತ್ರ ಭಾರತದಲ್ಲಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ದೇಶ ಕಂಡ ಅಪ್ರತಿಮ ನಾಯಕರು ಎಂದು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಮಾದರಿಯಾದ ಗಾಂಧಿ ಭವನ ನಿರ್ಮಾಣಗೊಂಡು ಇದೀಗ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಜಿಲ್ಲೆಯ‌ ಸಾರ್ವಜನಿಕರು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಿಸಿ, ಮಹಾತ್ಮ ಗಾಂಧಿ ಅವರ ಬಗೆಗೆ ಮತ್ತಷ್ಟು ಮಾಹಿತಿ ಅರಿತುಕೊಳ್ಳಬಹುದಾಗಿದೆ ಎಂದು ಹೇಳಿದರು.

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಕುರಿತು ಆಲಮಟ್ಟಿಯ ಎಂ ಎಚ್ ಎಂ ಪದವಿ ಪೂರ್ವ ಕಾಲೇಜಿನ ಮಹೇಶ ಗಾಳಪ್ಪಗೋಳ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ,ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ವಿಜಯಪುರದ ಉಪವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಸಿ. ಕೆ. ಹೊಸಮನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎನ್. ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾಧಿಕಾರಿ ಎಸ್. ಜಿ. ಲೋಣಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಸಾವಿತ್ರಿ ದಳವಾಯಿ
ಗೋಣಸಗಿ, ಪೀಟರ ಅಲೆಕ್ಸಾಂಡರ, ಬಾಬುಗೌಡ ಪಾಟೀಲ, ನಿಲೇಶ್ ಬೇನಾಳ, ಅಡಿವೆಪ್ಪ ಸಾಲಗಲ, ಸೋಮನಗೌಡ ಕಲ್ಲೂರ, ದೇವೇಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ನಿವೃತ್ತ ಶಿಕ್ಷಕ ಎಚ್. ಮಮದಾಪುರ ಜಿಲ್ಲಾ ಮಟ್ಟದ ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌