ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಯತ್ನಾಳ ಸೂಚನೆ

ವಿಜಯಪುರ: ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳು ವಾಸಿಸಲು ಅನುಕೂಲ ಮಾಡಿ ಕೊಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ನಗರ ಮತಕ್ಷೇತ್ರ ವ್ಯಾಪ್ತಿಯ ನಮೋ ನಗರದಲ್ಲಿ ನಿರ್ಮಾಣ ಆಗುತ್ತಿರುವ ಆಶ್ರಯ ಮನೆಗಳ ಕಾಮಗಾರಿಯನ್ನು ವೀಕ್ಷಿಸಿದ ಅವರು, ತ್ವರಿತಗತಿಯಲ್ಲಿ ಬಾಕಿ ಕಾಮಗಾರಿ ಮುಗಿಸುವ ಜೊತೆಗೆ ಗುಣಮಟ್ಟತೆ ಕಾಯ್ದುಕೊಳ್ಳಬೇಕು.  ಎರಡು ದಿನಗಳಿಗೊಮ್ಮೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಅವರಿಗೆ ಸೂಚನೆ ನೀಡಿದರು.

ವಿಜಯಪುರ ಶಾಸಕ ಯತ್ನಾಳ ಆಶ್ರಯ ಯೋಜನೆಗಳಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿ ವೀಕ್ಷಿಸಿದರು

ಮೊದಲ ಹಂತದಲ್ಲಿ 1493 ಮನೆಗಳು ನಿರ್ಮಾಣವಾಗುತ್ತಿದ್ದು, ಇವು ಮುಗಿದ ಬಳಿಕ ಎರಡನೇ ಹಂತದಲ್ಲಿ ಇನ್ನೂ 2250 ಮನೆಗಳು ನಿರ್ಮಾಣವಾಗಲಿವೆ.  ಹೀಗಾಗಿ ಬೇಗ ಬೇಗ ಕಾಮಗಾರಿ ಮುಗಿಸಬೇಕು.  ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಯಾವುದೇ ತೊಂದರೆ ಆಗದಂತೆ ಒಳಚರಂಡಿ, ಕುಡಿಯುವ ನೀರಿನ ಸಂಪರ್ಕ, ರಸ್ತೆ ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಇಲ್ಲಿ ಶಾಲೆ, ಉದ್ಯಾನ, ಆರೋಗ್ಯ ಕೇಂದ್ರ, ಗ್ರಂಥಾಲಯ ವ್ಯವಸ್ಥೆ ಸಹ ಇಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದೀನ್ ಸೌದಾಗರ ಸೇರಿದಂತೆ ಎಂಜಿನಿಯರರು, ಗುತ್ತಿಗೆದಾರರು, ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌