ಪೊಲೀಸ್ ಹುತಾತ್ಮ ದಿನ ಆಚರಣೆ: ನಮ್ಮ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಪೊಲೀಸರ್ ಸ್ಮರಣೆ ನಮ್ಮ ಕರ್ತವ್ಯ- ಟಿ. ಭೂಬಾಲನ

ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ  ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.

ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ.  1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ.  ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ- ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿಂದ ಜೀವನ ನಡೆಸಲು ಒಳನಾಡಿನಲ್ಲಿ ಪೊಲೀಸ ಕಾರ್ಯ ಅನನ್ಯವಾಗಿದೆ.  ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಡಿಸಿ ಟಿ. ಭೂಬಾಲನ್ ಮಾತನಾಡಿದರು

ಹಗಲಿರುಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪೊಲೀಸರು ತಮ್ಮ ಜೀವದ ಹಂಗು ತೊರೆದು ಹೋರಾಡಿ, ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ಜಿಲ್ಲೆಯ ಸಿಪಿಐ ರವಿ ಉಕ್ಕುಂದ ಅವರ ಕಾರ್ಯವನ್ನು ಸ್ಮರಿಸಿದ ಅವರು, ಯಶಸ್ವಿ ಪೊಲೀಸ್ ಕಾರ್ಯವೈಖರಿಯಿಂದ ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ನೆಲೆಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ,ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ಪೊಲೀಸ ಇಲಾಖೆ ನೀಡುತ್ತಿದೆ.  ಮುಂಬರುವ ದಿನಗಳಲ್ಲಿ ಪೊಲೀಸ್ ಇಲಾಖೆಯು ಸೇರಿದಂತೆ ಎಲ್ಲರೂ ಕೈಜೋಡಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ  ನೀಡುತ್ತ, ಜನರ ಸಂಧಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ ಎಂದು ಅವರು ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತ ಹುತಾತ್ಮರಾದ ಪೊಲೀಸರ ಸ್ಮರಣೆ ಮಾಡಿದರು.

ತಮ್ಮ ಜೀವದ ಹಂಗು ಲೆಕ್ಕಿಸದೇ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಸ್ಥಾಪಿಸಿದಂತಹÀ ಪೊಲೀಸರ ತ್ಯಾಗ ಮತ್ತು ಬಲಿದಾನ ಮಾಡಿದ ಪೊಲೀಸ್ ಹುತಾತ್ಮರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಟಿ. ಭೂಬಾಲನ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ದೇಶದ ರಕ್ಷಣೆ ಜನರ ನೆಮ್ಮದಿಗಾಗಿ ಹಾಗೂ ಉತ್ತಮ ಆಡಳಿತ ಕಟ್ಟಿಕೊಡುವಲ್ಲಿ ಪೊಲೀಸ್ ಕರ್ತವ್ಯ ಬಹು ಮುಖ್ಯವಾಗಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ  ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.ಎಸ್ಪಿ ಋಷಿಕೇಶ ಭವಾನ ಸೋನಾವಣೆ ಮಾತನಾಡಿ, 1959ರ ಚೀನಾ ಯುದ್ಧದಲ್ಲಿ ವೀರಮರಣ ಹೊಂದಿದ ವೀರ ಯೋಧರ ಸ್ಮರಣಾರ್ಥ ಪ್ರತಿ ವರ್ಷ ಅ. 21ರಂದು ಪೊಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತಿದೆ.  ಪೊಲೀಸರು ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ರಕ್ಷಣೆ ಸಂದರ್ಭದಲ್ಲಿ ಕಾರ್ಯ ನಿರ್ವಹಣೆಯಲ್ಲಿ ಹೋರಾಡಿ ಜೀವನ ತ್ಯಾಗ ಮಾಡಿದ ಲೀಸ್‌ರಿಗೆ  ಗೌರವ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ತಮ್ಮ ಕಾರ್ಯದಲ್ಲಿ ಶೂರತನದಿಂದ ಹೋರಾಡಿ, ಸಮರ್ಪಿತ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ವರ್ಷ ದೇಶಾದ್ಯಂತ 189 ಜನ ಪೊಲೀಸರು ತಮ್ಮ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಅವರು ಹುತಾತ್ಮ ಪೊಲೀಸ್‌ರ ಹೆಸರು ಹೇಳುವ ಮೂಲಕ ಸ್ಮರಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಪೊಲೀಸ್ ಇಲಾಖೆಯ ನಾನಾ ಅಧಿಕಾರಿಗಳು, ಸಿಬ್ಬಂದಿ, ಹುತಾತ್ಮ ಪೊಲೀಸ ಕುಟುಂಬಸ್ಥರು ಹಾಗೂ ಪತ್ರಕರ್ತರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಅರ್ಜುನ ಭಜಂತ್ರಿ ತಂಡ ಪೋಲಿಸ್ ಬ್ಯಾಂಡ್ ಮೂಲಕ ಗೀತೆ ಹಾಗೂ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಬಸವರಾಜ ಎಲಿಗಾರ, ಜಿಲ್ಲೆಯ ನಾನಾ ಪೊಲೀಸ್ ವಿಭಾಗದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಪರೇಡ ಕಮಾಂಡರ್ ಎಸ್ ಆರ್ ವನಂಜಕರ ಶಿಸ್ತು ಬದ್ಧ ಪೊಲೀಸ ಪರೇಡ್ ನಡೆಸಿಕೊಟ್ಟರು.  ನಿವೃತ್ತ ಶಿಕ್ಷಕ ಮಮದಾಪೂರ, ದಶರತ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌