ಸಿಎಂ ಜೊತೆ ಸಚಿವ ಎಂ. ಬಿ. ಪಾಟೀಲ ನೇತೃತ್ವದ ನಿಯೋಗದ ಸಭೆ: ನಂದಿ ಸಕ್ಕರೆ ಕಾರ್ಖಾನೆಗೆ ₹150 ಕೋ. ನೆರವಿಗೆ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 100 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆ ಮತ್ತು 50 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವಂತೆ ಕೋರಿ, ಕಾರ್ಖಾನೆಯ ಆಡಳಿತ ಮಂಡಲಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತ ಮಟ್ಟದ ನಿಯೋಗ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.  ಈ ಸಭೆಯ ಬಳಿಕ ಸಚಿವ ಎಂ. ಬಿ. ಪಾಟೀಲ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಸಚಿವ ಎಂ. ಬಿ. ಪಾಟೀಲ ನೇತೃತ್ವದ ನಿಯೋಗದೊಂದಿಗೆ ಸಿಎಂ ಎಸ್. ಸಿದ್ಧರಾಮಯ್ಯ ಸಭೆ ನಡೆಸಿದರು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ಈ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಪ್ರತಿದಿನ 6000 ಟನ್ ಕಬ್ಬು ಅರೆಯಲಾಗುತ್ತಿದೆ.  ಇದನ್ನು 10 ಸಾವಿರ ಟನ್ ಸಾಮರ್ಥ್ಯಕ್ಕೆ ಹೆಚ್ಚಿಸಲು ಕಾರ್ಖಾನೆಯ ಆಡಳಿತ ಮಂಡಳಿ ನಿರ್ಧರಿಸಿದೆ.  ಹೀಗಾಗಿ ಸರಕಾರದ ನೆರವು ಕೋರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಖಾನೆಯಲ್ಲಿ ಸಕ್ಕರೆ ಉತ್ಪಾದನೆಯ ಜೊತೆಗೆ ಈಗ 18.14 ಮೆಗಾವ್ಯಾಟ್ ವಿದ್ಯುತ್ತನ್ನು ಕೂಡ ಉತ್ಪಾದಿಸಲಾಗುತ್ತಿದೆ.  ಇದನ್ನು ಕೂಡ 55.14 ಮೆಗಾವ್ಯಾಟ್ ಪ್ರಮಾಣಕ್ಕೆ ಕೊಂಡೊಯ್ಯಲು ಅಲ್ಲಿನ ಆಡಳಿತ ಮಂಡಳಿ ತೀರ್ಮಾನಿಸಿದೆ.  ಸರಕಾರವು ಬಡ್ಡಿರಹಿತ ಸಾಲ ನೀಡಿದರೆ ಅದನ್ನು ಏಳು ವರ್ಷಗಳಲ್ಲಿ ತೀರಿಸುವುದಾಗಿ ಆಡಳಿತ ಮಂಡಳಿ ತಿಳಿಸಿದೆ ಎಂದು ಎಂ. ಬಿ. ಪಾಟೀಲ ಅವರು ತಿಳಿಸಿದರು.

ಮುಖ್ಯಮಂತ್ರಿ ಭೇಟಿ ಮಾಡಿದ ಈ ನಿಯೋಗದಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಶಾಸಕ ಜೆ. ಟಿ. ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ಕಾರ್ಖಾನೆಯ ಅಧ್ಯಕ್ಷ ಕುಮಾರ ದೇಸಾಯಿ, ಉಪಾಧ್ಯಕ್ಷ ಅಶೋಕ ಲೆಂಕಣ್ಣನವರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌