ಲೋಕಸಭೆ ಚುನಾವಣೆ ಮತ ಎಣಿಕೆ: ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಲೋಕಸಭೆ ಚುನಾವಣೆಯ ಮತ ಎಣಿಕೆಯು ಜೂ. 4 ರಂದು ಮಂಗಳವಾರ ಚುನಾವಣೆ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.  

ವಿಜಯಪುರ ಮೀಸಲು(ಪ. ಜಾ) ಲೋಕಸಭೆ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಚುನಾವಣೆ ವೀಕ್ಷಕರೊಂದಿಗೆ ಅಂತಿಮ ಹಂತದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ  ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸೈನಿಕ ಶಾಲೆಯಲ್ಲಿ ನಡೆಯಲಿರುವ ವಿಜಯಪುರ ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರಕ್ಕೆ ಚುನಾವಣೆ ವೀಕ್ಷಕಿ ಡಾ. ರತನಕನ್ವರ ಗಂದವಿಚರಣ ಅವರ ಜೊತೆ ತೆರಳಿದ ಡಿಸಿ ಟಿ. ಭೂಬಾಲನ್ ಸಿದ್ಧತೆ ಪರಿಶೀಲನೆ ನಡೆಸಿದರು.

 

ಮತ ಎಣಿಕೆ ಆರಂಭಕ್ಕೆ ಮುನ್ನ ಬೆ. 7 ಗಂಟೆಗೆ ಮತಯಂತ್ರಳನ್ನು ಇರಿಸಿದ ಭಧ್ರತಾ ಕೋಠಡಿಗಳನ್ನು ಚುನಾವಣೆ ವೀಕ್ಷಕರು, ಉಮೇದುವಾರರು ಹಾಗೂ ಚುನಾವಣೆ ಏಜೆಂಟರುಗಳ ಸಮ್ಮುಖದಲ್ಲಿ ತೆರೆಯಲಾಗುವುದು.  ಬೆ. 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.  ಅಂಚೆ ಮತಗಳ ಎಣಿಕೆಗೆ ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ.  ಮತ ಎಣಿಕೆಯ ದಿನವಾದ ಮಂಗಳವಾರದ ಬೆ. 8 ಗಂಟೆಯವರೆಗೂ ಪೋಸ್ಟಲ್ ಬ್ಯಾಲೆಟ್ ಗಳನ್ನು ಸ್ವೀಕರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಸೈನಿಕ್‌ ಶಾಲೆಯ ಒಡೆಯರ ಸದನದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.  ಆದಿಲ್‌ ಶಾಹಿ ಸದನದಲ್ಲಿ ಬಸವನ ಬಾಗೇವಾಡಿ ಮತ್ತು ಬಬಲೇಶ್ವರ, ಹೊಯ್ಸಳ ಸದನದಲ್ಲಿ ವಿಜಯಪುರ ನಗರ ಮತ್ತು ನಾಗಠಾಣ ಕ್ಷೇತ್ರ ಮತ್ತು ವಿಜಯನಗ ಸದನದಲ್ಲಿ ಇಂಡಿ ಹಾಗೂ ಸಿಂದಗಿ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.  ಇದೇ ವೇಳೆ ಹೊಯ್ಸಳ ಸದನದಲ್ಲಿ ಅಂಚೆ ಮತಗಳ ಎಣಿಕೆ ಕೂಡ ನಡೆಯಲಿದೆ ಎಂದು ಅವರು ಹೇಳಿದರು.

ಆಯಾ ವಿಧಾನಸಭೆ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಎಣಿಕೆ ಕಾರ್ಯವನ್ನು ಕೈಗೊಳ್ಳಲು ಪ್ರತಿ ವಿಧಾನಸಭೆ ಮತಕ್ಷೇತ್ರಕ್ಕೆ 14 ಟೇಬಲ್‌ಗಳಂತೆ ಒಟ್ಟು 8 ಮತಕ್ಷೇತ್ರಗಳಿಗೆ 112 ಟೇಬಲ್‌ಗಳಲ್ಲಿ ಹಾಗೂ ಅಂಚೆ ಮತಪತ್ರಗಳ ಎಣಿಕೆ ಕಾರ್ಯಕ್ಕಾಗಿ 12 ಟೇಬಲ್‌ಗಳಲ್ಲಿ ಹಾಗೂ ಇಟಿಪಿಬಿಎಸ್‌ ಮತಪತ್ರಗಳ ಸ್ಕ್ಯಾನಿಂಗ್‌ ಕಾರ್ಯವನ್ನು ಆರು ಟೇಬಲ್‌ಗಳಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

 

ಒಟ್ಟು 124 ಟೇಬಲ್ ಗಳಿಗೆ 12ಜನ ಸಹಾಯಕ ಚುನಾವಣಾ ಅಧಿಕಾರಿಗಳು, 124 ಸೂಪರ್ ವೈಸರ್, 136 ಅಸಿಸ್ಟೆಂಟ್ ಸೂಪರ್ ವೈಸರ್, 124 ಮೈಕ್ರೋ ಅಬ್ಸ್ ರವರ್, 87 ಜನ ರಿಸರ್ವ್ ಸಿಬ್ಬಂದಿ ಸೇರಿದಂತೆ ಒಟ್ಟು 483 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು

ಮತ‌ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
ಇದಲ್ಲದೇ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಕೂಡ‌ ಜಾರಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಮೊದಲು ಮತ ಎಣಿಕೆ ಕೊಠಡಿ, ಪಾರ್ಕಿಂಗ್, ಭದ್ರತಾ ಸಿಬ್ಬಂದಿ ನಿಯೋಜನೆ, ಊಟೋಪಹಾರ ವ್ಯವಸ್ಥೆ, ಮಾಧ್ಯಮ ಕೇಂದ್ರ ಮತ್ತಿತರ ಸೌಕರ್ಯಗಳ ಕುರಿತು ಚುನಾವಣೆ ವೀಕ್ಷಕಿ ಡಾ. ರತನಕನ್ವರ ಗಂದವಿಚರಣ, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಮತ್ತು ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌