ಅಪಘಾತ ತಗ್ಗಿಸಲು ಸುರಕ್ಷತಾ ಉಪಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಗ್ನಲ್ ರೋಡ ಬ್ಯಾರಿಕೇಡ್, ಮಾಹಿತಿ ಫಲಕ, ತಿರುವು ರಸ್ತೆಗಳ ಮಾಹಿತಿ, ವೃತ್ತಗಳ ಮಾಹಿತಿ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾಡಿದ ಅವರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳುವಳಿಕೆ ನೀಡಬೇಕು.  ರಸ್ತೆಯ ಸುಧಾರಣೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ಸೂಕ್ತ ಸಮಯದಲ್ಲಿ ಚಿಕಿತ್ಸೆ ಒದಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ತುರ್ತು ವೈದ್ಯಕೀಯ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಅಪಘಾತ ಪ್ರಕರಣಗಳು ಸಂಭವಿಸಿದ ಸಂದರ್ಭಧಲ್ಲಿ ಸಾವು ನೋವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು ಹೆದ್ದಾರಿಗಳಲ್ಲಿ ತುರ್ತು ದೂರವಾಣಿ 108 ಹೆದ್ದಾರಿ ಹೆಲ್ಪಲೈನ್ 1033 ಟೋಲ್ ಫ್ರೀ ಫಲಕಗಳನ್ನು ಅಳವಡಿಸಬೇಕು.  ಈ ದೂರವಾಣಿಗಳಿಗೆ ಬಂದಿರುವ ಕರೆಗಳಿಗೆ ತುರ್ತಾಗಿ ಸ್ಪಂದಿಸಬೇಕು.  ತುರ್ತು ಸಂದರ್ಭಗಳಲ್ಲಿ ಯಾವುದೇ ನಿರ್ಲಕ್ಷ್ಯ ತೋರದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು.  ಆದ್ಯತೆ ಮೇಲೆ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಸಭೆಗೆ ಮಾಹಿತಿ ನೀಡಿ ಜಿಲ್ಲಾಸ್ಪತ್ರೆಯ ಟ್ರಾಮಾ ಸೆಂಟರ್‍ನಲ್ಲಿ ಅಪಘಾತ ಪ್ರಕರಣಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಹೇಳಿದರು.

ವಿಜಯಪುರ ನಗರದ ಗಾಂಧಿಚೌಕಿನಿಂದ ಆರಂಭವಾಗುವ ರಸ್ತಗೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಸಂಚಾರ ಮಾಡದಂತೆ ಕ್ರಮ ಕೈಗೊಳ್ಳಬೇಕು.  ಪಾದಚಾರಿಗಳಿಗು ಸಹ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸಲು ಕ್ರಮ ಕೈಗೊಳ್ಳಬೇಕು.  ನಗರದೊಳಗೆ ಅವಶ್ಯಕತೆ ಇರುವ ಕಡೆ ಮಾತ್ರ ರೋಡ್ ಬ್ರೇಕ್ ಅಳವಡಿಸಬೇಕು.  ಹೆದ್ದಾರಿ ಪೆಟ್ರೋಲಿಂಗ್ ವಾಹನ ಹಗಲು, ರಾತ್ರಿ ಗಸ್ತು ನಡೆಸುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಶಾಲಾ ಮಕ್ಕಳು ದ್ವಿಚಕ್ರ ವಾಹನ ಬಳಕೆ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸಬೇಕು.  ಶಾಲೆಗಳಲ್ಲಿ ರಸ್ತೆ ಸುರಕ್ಷತೆ ಅನುಸರಿಸುವ ಅರಿವು ಕಾರ್ಯಕ್ರಮ ಆಯೋಜಿಸಿ ಜಾಗೃತಿ ಮೂಡಿಸಬೇಕು.  ಶಾಲಾ ವಾಹನಗಳಿಗೆ ಅನುಮತಿ ನೀಡುವಾಗ ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ಅನುಮತಿ ನೀಡಬೇಕು.  ಶಾಲಾ ವಾಹನಗಳು ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸುವ ಕುರಿತು ಪರಿಶೀಲನೆ ನಡೆಸಬೇಕು.

ಅಳಗಿನಾಳದ ಹತ್ತಿರ ರಸ್ತೆಯ ಪಕ್ಕದಲ್ಲಿ ಬಾವಿ ಇದ್ದು, ರಸ್ತೆ ಪಕ್ಕದಲ್ಲಿರುವುದರಿಂದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದು, ಯಾವುದೇ ಅವಘಡಗಳು ಸಂಭವಿಸಿದಂತೆ ಸೂಕ್ತ ಸುರಕ್ಷತೆ ಕ್ರಮ ವಹಿಸಬೇಕು.  ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಪಘಾತ ಸ್ಥಳಗಳಲ್ಲಿ ಇಂದಿನ ಸಭೆಯಲ್ಲಿ ನೀಡಿದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ, ಅಪಘಾತ ತಪ್ಪಿಸಿ ಅಮೂಲ್ಯ ಜೀವ ಉಳಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸದೇ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎೞದು ಅವರು ಸೂಚನೆ ನೀಡಿದರು.

ಎಸ್ಪಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಹಡಗಲಿ- ದೇವರಹಿಪ್ಪರಗಿ ಮಾರ್ಗ, ವಿಜಯಪುರ ನಗರದ ಪಾಟೀಲ್ ಪ್ಲಾನೆಟ್ ಲಿಂಗದ್ ಗುಡಿ ರಸ್ತೆ, ವಿಜಯಪುರ ಸೋಲಾಪುರ ಮಾರ್ಗದಲ್ಲಿನ ಹಳಗುಣಕಿ ಕ್ರಾಸ್ ಹತ್ತಿರ ಅಗಸನಾಳ ಸೇರಿದಂತೆ ಮುಂತಾದ ಅಪಘಾತ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.  ಟಿ ಜಂಕ್ಷನ್ ಸ್ಥಳದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ, ಸೈನೇಜ್ ವ್ಯವಸ್ಥೆ ಮಾಡಿ ಪರಿಹಾರ ಕ್ರಮಗಳನ್ನು ಕೈಗೊಂಡು ಅಪಘಾತ ತಪ್ಪಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಮದಾರ ಮಾತನಾಡಿ, ಈ ಹಿಂದಿನ ಸಭೆಯ ನಿರ್ದೇಶನದಂತೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ವಿಜಯಪುರ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಇಂಡಿ ಉಪ ವಿಭಾಗಾಧಿಕಾರಿ ಆಬಿದ ಗದ್ಯಾಳ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌