ಬೆಂಗಳೂರು: ನಾಳಿನ ನಮ್ಮ ಜಗತ್ತಿನಲ್ಲಿ ನಾನಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ‘ನಾವೀನ್ಯತೆ’ಯು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನರ ಗಮನ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಏರ್ಪಡಿಸಿರುವ `ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋವನ್ನು ಡಿಸಿಎಂ ಡಿ. ಕೆ. ಶಿವಕುಮಾರ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಚಾಲನೆ ನೀಡಿದರು.

ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಚಾಲನೆ ನೀಡಲಾಯಿತು.
ಇಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೂ ಇವೆ. ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ವೀಕ್ಷಿಸಬಹುದಾಗಿದೆ.
ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ `ಕರ್ನಾಟಕ ಪೆವಿಲಿಯನ್’ ಕೂಡ ಇಲ್ಲಿದೆ. ಇದರಲ್ಲಿ ಪಾಲ್ಗೊಂಡಿರುವ ಕಂಪನಿಗಳಲ್ಲಿ ಜಿ.ಇ ಹೆಲ್ತ್ ಕೇರ್, ಹೀರೋ ಫ್ಯೂಚರ್ ಎನರ್ಜೀಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಶನ್, ಗೆಲಾಕ್ಸಿ ಸ್ಪೇಸ್, ಲ್ಯಾಮ್ ರೀಸರ್ಚ್ ಪ್ರಮುಖವಾಗಿವೆ.
ಕರ್ನಾಟಕ ಪೆವಿಲಿಯನ್ ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್, ಫ್ಲಕ್ಸ್ ಆಟೋ ಮುಂತಾದ ಉದ್ಯಮಗಳಿವೆ.